ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ ಯಾಕೆ : ಸ್ಪಷ್ಟನೆ ಕೊಟ್ಟ ಪಿತ್ರೋಡಾ

ಜೈಪುರ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿಯವರು ಏಕೆ ಸ್ಪರ್ಧೆ ಮಾಡಲಿಲ್ಲ ಎನ್ನುವುದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು, ವಾರಣಾಸಿಯಿಂದ ಸ್ಪರ್ಧಿಸಬಾರದು ಎನ್ನವುದು ಪ್ರಿಯಾಂಕ ಗಾಂಧಿಯವರ ಸ್ವಂತ ನಿರ್ಧಾರ. ಅದು ಪಕ್ಷದ ನಿರ್ಧಾರ ಅಲ್ಲ ಎಂದು ತಿಳಿಸಿದ್ದಾರೆ.

ಪ್ರಿಯಾಂಕ ಗಾಂಧಿ ಅವರ ಜವಾಬ್ದಾರಿಯೇ ಬೇರೆ. ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಬೇರೆ ಕಡೆ ಗಮನ ಹರಿಸಲು ಸಾಧ್ಯವಾಗುದಿಲ್ಲ. ಕೇವಲ ಒಂದೇ ಕ್ಷೇತ್ರದ ಮೇಲೆ ಗಮನ ಕೇಂದ್ರಿಕರಿಸುವುದಕ್ಕಿಂತ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂಬುದು ಅವರ ಅನಿಸಿಕೆಯಾಗಿದೆ ಎಂದು ಸ್ಯಾಮ್ ಪಿತ್ರೋಡಾ ಹೇಳಿದರು.

ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು. ಎಐಸಿಸಿ ಅಧ್ಯಕ್ಷ, ಸಹೋದರ ರಾಹುಲ್ ಗಾಂಧಿ ಅವರು ತಿಳಿಸಿದರೆ ನಾನು ವಾರಣಾಸಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸ್ವತಃ ಪ್ರಿಯಾಂಕ ಗಾಂಧಿ ಅವರು ಹೇಳಿದ್ದರು. ಅಷ್ಟೇ ಅಲ್ಲದೆ ಅವರ ಪತಿ ರಾಬರ್ಟ್ ವಾದ್ರಾ ಕೂಡ ಪ್ರಿಯಾಂಕ ಸ್ಪರ್ಧೆಯ ಬಗ್ಗೆ ಹೇಳಿಕೊಂಡಿದ್ದರು.

ಎಲ್ಲ ಬೆಳವಣಿಗೆಯ ಬಳಿಕ ವಾರಣಾಸಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರು ಅಜಯ್ ರಾಯ್ ಅವರ ಹೆಸರನ್ನು ಅಂತಿಮಗೊಳಿಸಿ, ಘೋಷಣೆ ಮಾಡಿದರು. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಎನ್‍ಡಿಎ ನಾಯಕರ ಸಮ್ಮುಖದಲ್ಲಿ ಇಂದು ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮತದಾನವು ಮೇ 19ರಂದು ನಡೆಯಲಿದ್ದು, ಮತ ಏಣಿಕೆಯು ಮೇ 23ರಂದು ನಡೆಯಲಿದೆ.

Comments

Leave a Reply

Your email address will not be published. Required fields are marked *