ದೋಸ್ತಿ ಸರ್ಕಾರದ ನಿರ್ಧಾರದ ವಿರುದ್ಧವೇ ಬಿಸಿ ಪಾಟೀಲ್ ಕಿಡಿ

ಹಾವೇರಿ: ಬೆಂಗಳೂರಿಗೆ ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ನೀರು ಹರಿಸುವ ಯೋಜನೆಯನ್ನು ವಿರೋಧಿಸುತ್ತೇವೆ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ ಎಂದು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಟ್ವೀಟ್ ಮೂಲಕ ದೊಸ್ತಿ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿಗೆ ಶರಾವತಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಲೆನಾಡು ಜನತೆ ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈಗ ಬಿಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕ ನೇರವಾಗಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

ಈ ಯೋಜನೆಗೆ ವಿರೋಧವಿದೆ. ಬೆಂಗಳೂರು ಬೆಳೆಯುವುದನ್ನ ನಿಲ್ಲಿಸಿ, ಉತ್ತರ ಕರ್ನಾಟಕವನ್ನ ಬೆಳೆಸಿ. ಇಲ್ಲಿ ಸಾಕಷ್ಟು ನದಿಗಳಿವೆ. ಅವುಗಳನ್ನ ಅಭಿವೃದ್ಧಿ ಮಾಡಿ. ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ವಹಿಸಿ ಎಂದು ಪರೋಕ್ಷವಾಗಿ ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಬೆಂಗಳೂರಿಗೆ ಶರಾವತಿ ನದಿಯ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ವಿರೋಧ. ಬೆಂಗಳೂರು ಬೆಳೆಯುವುದನ್ನು ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ ಇಲ್ಲಿ ಸಾಕಷ್ಟು ನದಿಗಳಿವೆ ಎಂದು ಬರೆದು, ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿಎಂ ಆಫ್ ಕರ್ನಾಟಕ ಟ್ಯಾಗ್ ಮಾಡಿ ಟ್ವೀಟ್ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಬಂದ್‍ಗೆ ಕರೆ: ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯಿಂದ ಅಪಾರ ಪರಿಸರ ನಾಶವಾಗುತ್ತದೆ. ಅದ್ದರಿಂದ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜುಲೈ 10 ರಂದು ಶರಾವತಿ ಉಳಿಸಿ ಹೋರಾಟ ಒಕ್ಕೂಟದ ಸಭೆ ಶಿವಮೊಗ್ಗ ಬಂದ್‍ಗೆ ಕರೆ ನೀಡಿದೆ.

ಶನಿವಾರ ಜಿಲ್ಲೆಯ ನೌಕರರ ಭವನದಲ್ಲಿ ತಾಲೂಕು ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಶಿವಮೊಗ್ಗದ ವಿವಿಧ ಸಂಘ, ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳು ಸೇರಿ ಈ ಯೋಜನೆ ಜಾರಿ ಆದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂದು ಈ ತೀರ್ಮಾನ ಕೈಗೊಂಡಿದೆ.

Comments

Leave a Reply

Your email address will not be published. Required fields are marked *