ನಂಬಿದವರೇ ನನ್ನ ಬೆನ್ನಿಗೆ ಚೂರಿ ಹಾಕಿದ್ರು – ಸಿದ್ದರಾಮಯ್ಯ

ಬೆಂಗಳೂರು: ಭಾನುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತೃಪ್ತ ಶಾಸಕರ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿ, ರಾಜಕೀಯದಲ್ಲಿ ಯಾರನ್ನು ನಂಬಬೇಕು ಎಂಬುದೇ ತಿಳಿಯುತ್ತಿಲ್ಲ. ನಂಬಿಕೆ ಎಂಬ ಪದಕ್ಕೆ ಇಲ್ಲಿ ಅರ್ಥವೇ ಇಲ್ಲದಂತೆ ಆಗಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಈ ಮೂಲಕ ಹೇಸಿಗೆ ತಿನ್ನುವಂತ ಕೆಲಸ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಕೆಲ ಶಾಸಕರು ನನಗೆ ಆಪ್ತರು. ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ. ನಾನು ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೀನಾ ಎಂದು ಸಭೆಯಲ್ಲಿ ಶಾಸಕರಿಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಅಂತಹ ನೀಚ ಕೆಲಸವನ್ನು ನಾನು ಮಾಡಲಾರೆ. ಇವರು ಮಾಡಿದ ಕೆಲಸದಿಂದ ನನಗೆ ನೋವಾಗಿದೆ. ಬಸವರಾಜ್, ಮುನಿರತ್ನ, ಸೋಮಶೇಖರ್, ಸುಧಾಕರ್ ಹೇಳಿದ ಕೆಲಸವನ್ನು ಮಾಡಿಕೊಡುತ್ತಿದ್ದೆ. ಶ್ರೀಮಂತ ಪಾಟೀಲ್ ಬಗ್ಗೆ ಮೊದಲಿನಿಂದಲೂ ಅನುಮಾನ ಇತ್ತು. ಅವರ ಮೇಲೆ ಕಣ್ಣಿಡುವಂತೆ ನಾನೇ ಹೇಳಿದ್ದೆ ಎಂದರು.

ಹೋಗಬೇಕು ಎಂದು ತೀರ್ಮಾನ ಮಾಡಿದವರನ್ನು ತಡೆಯಲು ಸಾಧ್ಯವೇ? ನನ್ನ ಬಗ್ಗೆ ಅಪಪ್ರಚಾರ ಮಾಡಿದರೆ ಸಿಗುವ ಲಾಭವಾದರೂ ಏನು? ಎಂಟಿಬಿ ನಾಗರಾಜ್, ಸುಧಾಕರ್, ಮುನಿರತ್ನ ಜೊತೆ ಮಾತನಾಡಿದಾಗ ನಾವು ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿ ಕೈ ಕೊಟ್ಟರು. ಎಲ್ಲರೂ ಮೋಸ ಮಾಡಿದರು. ಇದಕ್ಕಿಂತ ನೋವು ಇನ್ನೇನು ಆಗಬೇಕು ಎಂದು ತಾಜ್ ವಿವಾಂತ ಹೋಟೆಲಿನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ಬೇಸರ ಹೊರಹಾಕಿದ್ದಾರೆ.

Comments

Leave a Reply

Your email address will not be published. Required fields are marked *