ಬೆಳಗಾವಿ ವಿಮಾನ ನಿಲ್ದಾಣದ ಪಕ್ಕದಲ್ಲಿ ಭೂ ಕುಸಿತ

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲೇ ಭೂಮಿ ಕುಸಿತವಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿದ್ದು ಭಾರೀ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವಿಮಾನ ನಿಲ್ದಾಣದ ಕಾಂಪೌಂಡ್‍ಗೆ ಹೊಂದಿಕೊಂಡು ಐದು ಅಡಿಯಷ್ಟು ಭೂಮಿ ಕುಸಿದಿದೆ. ಕುಸಿದ ಭೂಮಿಯಲ್ಲೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಪರಿಣಾಮ ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಸಾಂಬ್ರಾ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಬೆಳಗಾವಿ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮಳೆಗೆ ನಗರದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಂಜರ್ ಗಲ್ಲಿಯಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಇತ್ತ ಖಡೇಬಜಾರ್ ನಲ್ಲಿ ಎರಡು ಮನೆಗಳು ಕುಸಿತವಾಗಿದೆ.

ಬೆಳಗಾವಿ ತಾಲೂಕಿನಾದ್ಯಂತ ಭಾರೀ ಮಳೆಗೆ ಜಮೀನು ಮುಳುಗಡೆ ಹಿನ್ನೆಲೆಯಲ್ಲಿ ಜಲಾವೃತ ಜಮೀನುಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಮತ್ತು ಹುದಲಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರ್ಕಂಡೇಯ ನದಿ ತುಂಬಿ ಹರಿದ ಪರಿಣಾಮ ಜಮೀನುಗಳಿಗೆ ನೀರು ನುಗ್ಗಿದ್ದು, ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

 

Comments

Leave a Reply

Your email address will not be published. Required fields are marked *