ದೀರ್ಘಕಾಲದ ಬೇಡಿಕೆ ಈಡೇರಿದೆ – ಕೇಂದ್ರವನ್ನು ಹೊಗಳಿದ ಮಾಯಾವತಿ

ಲಕ್ನೋ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ ಅವರು ಬೆಂಬಲಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ.

ಸಂವಿಧಾನದಲ್ಲಿ ರೂಪಿಸಲಾದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ದೇಶಾದ್ಯಂತ ವಿಸ್ತರಿಸಬೇಕು. 370ನೇ ವಿಧಿ ಮತ್ತು 35ಎ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ದೀರ್ಘಕಾಲದ ಬೇಡಿಕೆಯಾಗಿತ್ತು. ಅದು ಈಗ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಉತ್ತಮ ಲಾಭ ಪಡೆಯಲಿದ್ದಾರೆ ಎಂದು ಬಿಎಸ್‍ಪಿ ನಂಬಿದೆ ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಅಲ್ಲದೆ, ಲಡಾಕ್‍ನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ್ದ ನಿರ್ಧಾರವನ್ನು ಸಹ ಮಾಯಾವತಿ ಅವರು ಸ್ವಾಗತಿಸಿದ್ದಾರೆ. ಇದರಿಂದ ಬೌದ್ಧ ಜನರ ಹಳೆಯ ಬೇಡಿಕೆಗಳನ್ನು ಈಡೇರಿಸಿದಂತಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಬೌದ್ಧ ಅನುಯಾಯಿಗಳು ದೇಶಾದ್ಯಂತ ಸಂತಸಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಿಚಯಿಸಿದ 370ನೇ ವಿಧಿ ಹಾಗೂ 35ಎ ರದ್ದತಿ ಕುರಿತ ನಿರ್ಧಾರಕ್ಕೆ ಹಲವು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ, ಕೇಂದ್ರ ಸರ್ಕಾರದ ನಿಲುವಿಗೆ ಬಿಎಸ್‍ಪಿ ಬೆಂಬಲ ವ್ಯಕ್ತಪಡಿಸಿತ್ತು.

Comments

Leave a Reply

Your email address will not be published. Required fields are marked *