ಕೆಎಂಎಫ್ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ರೇವಣ್ಣಗೆ ಬಿಜೆಪಿ ಟಕ್ಕರ್

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನ ಗಾದಿ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಮುಂದಾಗಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 31ರಂದು ಚುನಾವಣೆ ನಡೆಯಲಿದ್ದು, ಎಚ್.ಡಿ.ರೇವಣ್ಣ ವಿರುದ್ಧ ಪ್ರಬಲ ಸ್ಪರ್ಧಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪನವರ ಭೇಟಿ ಬಳಿಕ ಮಾತನಾಡಿದ್ದ ಶಾಸಕರು, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಬದಲಾಗಿ ಕೆಎಂಎಫ್ ಅಧ್ಯಕ್ಷನಾಗಲು ಬಯಸಿದ್ದೇನೆ. ನಾನು ನೇರವಾಗಿ ಜನರ ಕೆಲಸ ಮಾಡಬೇಕು ಎಂದುಕೊಂಡಿದ್ದೇನೆ. ಅದಕ್ಕಾಗಿಯೇ ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ. 15 ಜನರ ವಿಶ್ವಾಸವನ್ನು ಗಳಿಸಿ ಸಂಪೂರ್ಣ ಬೆಂಬಲದಿಂದ ಕೆಎಂಎಫ್ ಅಧ್ಯಕ್ಷನಾಗುತ್ತೇನೆ ಎಂದು ಹೇಳಿದ್ದರು.

ಇದೇ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಅವರು ಒಪ್ಪಿ ಸರ್ಕಾರದಿಂದ ಈಗಾಗಲೇ ನಾಮನಿರ್ದೇಶನ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ನನ್ನ ಹೆಸರು ಈಗಾಗಲೇ ನಾಮನಿರ್ದೇಶನಗೊಂಡಿದೆ. ಕೆಎಂಎಫ್‍ನ 15 ಜನ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷನಾಗಬೇಕೆಂದಿದ್ದೇನೆ ಎಂದು ತಿಳಿಸಿದ್ದರು.

ಈಗಾಗಲೇ ಕಾಂಗ್ರೆಸ್‍ನ ಶಾಸಕ ಭೀಮಾನಾಯ್ಕ್ ಅವರು ಕೂಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಈ ಮೂಲಕ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಮೂರೂ ಪಕ್ಷಗಳ ಕಣ್ಣು ಬಿದ್ದಿದ್ದು, ಭರ್ಜರಿ ಪೈಪೋಟಿ ಎದುರಾಗಿದೆ.

Comments

Leave a Reply

Your email address will not be published. Required fields are marked *