ರಾಜ್ಯ ಉಪಚುನಾವಣೆಗೆ ತಡೆಯಾಜ್ಞೆ ಸಿಗೋ ವಿಶ್ವಾಸವಿದೆ- ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದ 15 ಕ್ಷೇತ್ರಗಳಲ್ಲಿ ಅಕ್ಟೋಬರ್ 21ರಂದು ಬೈ ಎಲೆಕ್ಷನ್ ಘೋಷಣೆಯಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಡಾ. ಕೆ ಸುಧಾಕರ್ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಚುನಾವಣೆ ಘೋಷಣೆ ಅಗಿದೆ. ಮತ್ತೊಂದೆಡೆ ಅನರ್ಹ ಶಾಸಕರ ಅರ್ಜಿ ಸುಪ್ರೀಂಕೋರ್ಟಿನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. ಹೀಗಾಗಿ ತರಾತರಿಯಲ್ಲಿ ಅಂದರೆ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಇತ್ಯರ್ಥಕ್ಕೂ ಮುನ್ನವೇ ಚುನಾವಣೆ ನಡೆದರೆ ಅನರ್ಹ ಶಾಸಕರಾದ ನಮಗೆ ಅನ್ಯಾಯ ಆದಂತೆ ಆಗುತ್ತದೆ ಎಂದರು.

ಅಲ್ಲದೆ ಅರ್ಜಿ ಇತ್ಯರ್ಥ ಆಗುವವರೆಗೂ ಚುನಾವಣೆ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟಿಗೆ ನಮ್ಮ ಪರ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲು ಸುಪ್ರೀಂಕೋರ್ಟ್ ನ್ಯಾಯಾಧೀಶರು ಬಿಡುವುದಿಲ್ಲ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

ಬೈ ಎಲೆಕ್ಷನ್:
ಕರ್ನಾಟಕ ಉಪ ಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಇಂದು ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಿದರು. ಕರ್ನಾಟಕದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಸೇರಿದಂತೆ ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಯಾವ್ಯಾವ ಕ್ಷೇತ್ರಗಳಲ್ಲಿ ಎಲೆಕ್ಷನ್:
ಗೋಕಾಕ್, ಅಥಣಿ, ಕಾಗವಾಡ, ಹಿರೆಕೇರೂರು, ಯಲ್ಲಾಪುರ, ಯಶವಂತಪುರ್, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರದಲ್ಲಿ ಉಪಚುನಾವಣೆ ನಡೆದರೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ರಾಯಚೂರಿನ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದಿಲ್ಲ.

Comments

Leave a Reply

Your email address will not be published. Required fields are marked *