ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ- ಸಿಡಿಲಿಗೆ ವೃದ್ಧೆ ಬಲಿ

– ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣ ಅಬ್ಬರ ಮುಂದುವರಿದಿದ್ದು, ಗುರುವಾರವೂ ಬೆಂಗಳೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ವಿವಿಧೆಡೆ ಭರ್ಜರಿ ಮಳೆಯಾಗಿದೆ.

ಕೊಡಗಿನ ಭಾಗಮಂಡಲ ತಲಕಾವೇರಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಹವಾಮಾನ ಇಲಾಖೆಯ ವರದಿ ಆಧರಿಸಿ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಜಿಲ್ಲೆಯ ಜನರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸಿಡಿಲಿನ ಭಯದಿಂದ ರೈಲ್ವೆ ಹಳಿ ದಾಟುತ್ತಿದ್ದ ಯುವಕರಿಗೆ ರೈಲು ಡಿಕ್ಕಿ- ಓರ್ವ ಸಾವು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆ ಮಳೆಯ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ವರುಣನ ಅಬ್ಬರದಿಂದಾಗಿ ಮಲೆನಾಡಿ ಜನರು ಆತಂಕಕ್ಕೀಡಾಗಿದ್ದಾರೆ.

ವೃದ್ಧೆ ಸಾವು:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಗುಡುಗು, ಸಿಡಿಲು ಸೇರಿದಂತೆ ಭಾರೀ ಮಳೆಯಾಗುತ್ತಿದೆ. ಮುಂದುವರಿದ ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಾದ್ಯಂತ ಕಾರ್ಮೋಡ ಆವರಿಸಿದೆ. ಮೂಡಬಿದರೆಯ ಕರೀಂಜೆ ಎಂಬಲ್ಲಿ ಸಿಡಿಲಿಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಕರಿಂಜೆ ನಿವಾಸಿ ಅಪ್ಪಿ ಶೆಡ್ತಿ (85) ಮೃತಪಟ್ಟ ವೃದ್ಧೆ.

ಮುಂಗಾರು ಮಳೆ ಮುಗಿದು, ಇಂದಿನಿಂದ ಹಿಂಗಾರು ಮಳೆ ಶುರುವಾಗಿದೆ. ನೈರುತ್ಯ ಮಾರುತಗಳು ದೇಶದಿಂದ ನಿರ್ಗಮಿಸಿದ್ದು, ಈಶಾನ್ಯ ಮಾರುತಗಳು 10 ದಿನ ಮೊದಲೇ ದಕ್ಷಿಣ ಭಾರತಕ್ಕೆ ಎಂಟ್ರಿ ಕೊಟ್ಟಿವೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಮಳೆ ಆಗಲಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Comments

Leave a Reply

Your email address will not be published. Required fields are marked *