ನೋಡೋ ನನ್ ಫೋನ್ ಹೇಗಿದೆ, ನಿನ್ ಮೊಬೈಲ್ ಹೇಗಿದೆ: ಅಧಿಕಾರಿಗಳಿಗೆ ಅಶೋಕ್ ಕ್ಲಾಸ್

ಹುಬ್ಬಳ್ಳಿ: ನಗರದಲ್ಲಿ ಇಂದು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವ ಆರ್ ಅಶೋಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಹುಬಳ್ಳಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮುನ್ನ ಕಂದಾಯ ಸಚಿವ ಅಧಿಕಾರಿಗಳ ಬಳಿ ಸಚಿವರು ಮಾಹಿತಿ ಕೇಳಿದರು. ಈ ವೇಳೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಚಿವರಿಗೆ ಸಮರ್ಪಕವಾದ ಮಾಹಿತಿ ನೀಡಲಿಲ್ಲ. ಹೀಗಾಗಿ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಸಚಿವ ಅಶೋಕ್ ಸುಮಾರು ಅರ್ಧ ಗಂಟೆ ಕಾಲ ಕಾದು ಬಳಿಕ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಕ್ಯಾಮೆರಾ ಕಣ್ಣು ತಪ್ಪಿಸಿ ಪ್ರವಾಸಿ ಮಂದಿರದಲ್ಲಿ ವಾಕಿಂಗ್ ಮಾಡುತ್ತಲೇ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಸರಿಯಾದ ಮಾಹಿತಿ ನೀಡದ ಜಂಟಿ ಕೃಷಿ ನಿರ್ದೇಶಕ ಅಬೀದ್‍ರಿಗೆ, ಸರಿಯಾದ ಮಾಹಿತಿ ತೆಗೆದುಕೊಂಡು ಬರಬೇಕು. ನೋಡು ನಿನ್ನ ಫೋನ್ ಹೇಗಿದೆ. ನನ್ನ ಬಳಿ ಹೇಗಿದೆ ಫೋನ್ ಎಂದು ತಮ್ಮ ಬಳಿಯಿರುವ ಸಾದಾ ಫೋನ್ ತೋರಿಸುವ ಮೂಲಕ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಪ್ರವಾಹ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ವಿತರಣೆಗೆ ಕೇಂದ್ರ ಸರ್ಕಾರ ನಿಯಮಾವಳಿಗಳ ಬಗ್ಗೆ ಅಧಿಕಾರಿಗಳ ಬಳಿ ದಾಖಲೆ, ಮಾಹಿತಿ ಕೇಳಿದರು. ಈ ವೇಳೆ ಅಧಿಕಾರಿಗಳು ಇಲ್ಲ ಎಂದಾಗ ಸಚಿವ ಅಶೋಕ್ ಎಲ್ಲ ತೆಗೆದುಕೊಂಡು ಬರಬೇಕು, ಸರಿಯಾದ ಮಾಹಿತಿ ಇಟ್ಟುಕೊಳ್ಳಬೇಕು ಎಂದು ಗರಂ ಆದರು. ಈ ವೇಳೆ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಸಚಿವ ಅಶೋಕರಿಗೆ ಮಾಹಿತಿ ನೀಡಿ ಸುದ್ದಿಗೋಷ್ಠಿಗೆ ಕರೆದುಕೊಂಡು ಹೋದರು.

Comments

Leave a Reply

Your email address will not be published. Required fields are marked *