ಪಿ.ಚಿದಂಬರಂಗೆ ಜಾಮೀನು ಮಂಜೂರು

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ನ್ಯಾ. ಆರ್ ಭಾನುಮತಿ ನೇತೃತ್ವದ ತ್ರಿ ಸದಸ್ಯ ಪೀಠ ಚಿದಂಬರಂ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಈ ಮೂಲಕ ಸುಮಾರು 105 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಕೇಂದ್ರದ ಮಾಜಿ ಸಚಿವರಿಗೆ ಇಂದು ಬಿಡುಗಡೆಯ ಭಾಗ್ಯ ದೊರೆತಿದೆ. 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ನೀಡಬೇಕು. ಈ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೆ ದೇಶ ಬಿಡುವಂತಿಲ್ಲ ಎಂದು ಷರತ್ತು ವಿಧಿಸಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವರು ಸಾರ್ವಜನಿಕ ಹೇಳಿಕೆ ಹಾಗೂ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿದೆ.

ನವೆಂಬರ್ 15ರಂದು ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಐಎನ್ ಎಕ್ಸ್ ಪ್ರಕರಣದಲ್ಲಿ ಚಿದಂಬರಂ ಅವರದ್ದು ಪ್ರಮುಖ ಪಾತ್ರವಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಆದರೆ ಇಂದು ಚಿದಂಬರಂ ಜಾಮೀನು ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ:  ಬಂಧನಕ್ಕೊಳಗಾದ ನಂತರ ಚಿದಂಬರಂ ತೂಕ 8-9 ಕೆಜಿ ಕಡಿಮೆಯಾಗಿದೆ – ಕುಟುಂಬಸ್ಥರ ಬೇಸರ

ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಿತ್ತು. ಇದನ್ನೂ ಓದಿ: ಐಎನ್‍ಎಕ್ಸ್ ಕೇಸ್ – ತಿಹಾರ್ ಜೈಲಿಗೆ ಚಿದಂಬರಂ

Comments

Leave a Reply

Your email address will not be published. Required fields are marked *