ಪ್ಲಾಸ್ಟಿಕ್ ಬಳಸಿದ್ದಕ್ಕೆ ದಂಡ ಹಾಕಿಲ್ಲವೆಂದು ಅಧಿಕಾರಿಗಳಿಗೆ ನೋಟಿಸ್

ಬೆಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ಲಾಸ್ಟಿಕ್ ನಿಷೇಧದ ಸಂಕಲ್ಪ ತೊಟ್ಟರು. ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ಸದ್ಯ ನಿಷೇಧ ಮಾಡಲಾಗಿದೆ. ಆದರೆ ನಿಯಮ ಪಾಲನೆ ಆಗ್ತಾ ಇಲ್ಲ ಎಂಬ ಆರೋಪ ಕೇಳಿಬಂದಿದೆ.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಪ್ಲಾಸ್ಟಿಕ್ ನಿಷೇಧ ನಿಯಮ ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾದ 30 ವಾರ್ಡ್ ಗಳ, 30 ಮಂದಿ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಪಾಲಿಕೆ ನೋಟಿಸು ನೀಡಿದೆ.

ಪ್ಲಾಸ್ಟಿಕ್ ನಿಷೇಧವಾಗಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವಲ್ಲಿ ದಾಳಿ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವವರಿಗೆ ದಂಡ ವಿಧಿಸಬೇಕು. ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಯಂತ್ರಿಸುವ ಜವಾಬ್ದಾರಿ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ನೀಡಲಾಗಿದೆ. ಆದರೆ ಜವಾಬ್ದಾರಿ ಮರೆತು, ಕಳಪೆ ಕಾರ್ಯಕ್ಷಮತೆ ಇರುವ ಆರೋಗ್ಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸು ಜಾರಿ ಮಾಡಲಾಗಿದೆ.

ಕೆ.ಆರ್ ಮಾರುಕಟ್ಟೆ, ರಸೆಲ್ ಮಾರುಕಟ್ಟೆ, ಜಯನಗರ ಕಾಂಪ್ಲೆಕ್ಸ್, ಮಾಲ್ ಪ್ರದೇಶಗಳಿಗೆ ಕಡ್ಡಾಯವಾಗಿ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲಿಸಬೇಕು. ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಆದರೆ ಇದ್ಯಾವುದೂ ಆಗಿಲ್ಲ. ಪರಿಣಾಮ ನೋಟಿಸ್ ಜಾರಿ ಮಾಡಿ ಎಚ್ಚರಿಕೆ ನೀಡಲಾಗಿದೆ.

ನೋಟಿಸ್ ನೀಡಿರುವ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 21ರ ಒಳಗೆ ಸಮರ್ಪಕ ಕೆಲಸ ನಿರ್ವಹಿಸಬೇಕು. ಮತ್ತೆಯೂ ಕೆಲಸ ಕಳಪೆಯಾಗಿದ್ದರೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ. ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Comments

Leave a Reply

Your email address will not be published. Required fields are marked *