ಸಂಬಳ ಹೆಚ್ಚು ಕೇಳಿದ ಚಾಲಕನ ಮೇಲೆ ಕಲ್ಲು ಎತ್ತಾಕಿ, ದೇಹ ಸುಟ್ಟ ಮಾಲೀಕ

– ಅರ್ಧಂಬರ್ಧ ಸುಟ್ಟ ಮೃತದೇಹ ಕೆರೆಗೆ ಎಸೆದ

ಬೆಂಗಳೂರು: ಸಂಬಳ ಹೆಚ್ಚು ಕೇಳಿದಕ್ಕೆ ಚಾಲಕನ ಮೇಲೆ ಮಾಲೀಕ ಹಾಗೂ ಆತನ ಸ್ನೇಹಿತ ಕಲ್ಲು ಎತ್ತಾಕಿ ಕೊಲೆಗೈದು, ಮೃತದೇಹ ಸುಟ್ಟು, ಅರ್ಧಂಬರ್ಧ ಸುಟ್ಟ ಮೃತದೇಹವನ್ನು ರಾಮ್‍ಪುರ ಕೆರೆಯಲ್ಲಿ ಎಸೆದ ಅಮಾನವೀಯ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

ಮಾರ್ಚ್ 10ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪ್ಯಾಕರ್ಸ್ ಅಂಡ್ ಮೂವರ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಚಿಂತಾಮಣಿ ನಿವಾಸಿ ಕೃಷ್ಣ ಹಾಗೂ ಹಲಸೂರು ನಿವಾಸಿ ಮಾಯಾಕೃಷ್ಣ ಎಂದು ಗುರುತಿಸಲಾಗಿದೆ. ಕೃಷ್ಣ ನಡೆಸುತ್ತಿದ್ದ ಕಂಪನಿಯನ್ನು ಚಾಲಕನಾಗಿದ್ದ ಶ್ರೀನಿವಾಸ್ ಪಾರ್ಸೆಲ್‌ಗಳನ್ನು ಗ್ರಾಹಕರ ಮನೆ ಬಾಗಲಿಗೆ ಡೆಲಿವರಿ ಮಾಡುತ್ತಿದ್ದನು.

ಮಾಚ್ 10ರಂದು ಶ್ರೀನಿವಾಸ್ ಕೃಷ್ಣನ ಬಳಿ ತನಗೆ ಸಂಬಳ ಹೆಚ್ಚಿಗೆ ಮಾಡಿ ಎಂದು ಕೇಳಿದ್ದನು. ಈ ಬಗ್ಗೆ ಆತನ ಜೊತೆ ಕೂತು ಮಾತನಾಡಿ ಮಾಲೀಕ ನಿರ್ಧಾರ ತೆಗೆದುಕೊಳ್ಳುವ ಬದಲು ಚಾಲಕನನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದು, ತನ್ನ ಸ್ನೇಹಿತ ಮಾಯಾಕೃಷ್ಣನ ಸಹಾಯ ಪಡೆದು ಚಾಲಕನನ್ನ ಕೊಲೆ ಮಾಡಲು ನಿರ್ಧರಿಸಿದನು.

ಚಾಲಕ ಮಲಗಿದ್ದ ವೇಳೆ ಆತನ ತಲೆ ಮೇಲೆ ಕಲ್ಲು ಎತ್ತಾಕಿ ಕೃಷ್ಣ ಹಾಗೂ ಆತನ ಗೆಳೆಯ ಕೊಲೆ ಮಾಡಿದರು. ಬಳಿಕ ಮೃತದೇಹವನ್ನು ಬೆಂಕಿ ಹಚ್ಚಿ ಸುಟ್ಟುಹಾಕಿದರು. ಆ ನಂತರ ಈ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಅರ್ಧಂಬರ್ಧ ಸುಟ್ಟಿದ್ದ ಶವವನ್ನು ರಾಮ್‍ಪುರ ಕೆರೆಯಲ್ಲಿ ಎಸೆದು ಹೋದರು.

ಆದರೆ ಸ್ಥಳೀಯರು ಕೆರೆ ಬಳಿ ಓಡಾಡುತ್ತಿದ್ದಾಗ ದುರ್ನಾತ ಬರುತ್ತಿದ್ದದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ಕುರಿತು ತನಿಖೆ ಕೈಗೊಂಡಾಗ ಸತ್ಯಾಂಶ ಹೊರಬಿದ್ದಿದೆ.

ಪ್ರಮುಖ ಆರೋಪಿ ಕೃಷ್ಣನನ್ನು ಸದ್ಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ವಿಚಾರಣೆ ವೇಳೆ ಕೊಲೆ ಮಾಡಲು ಕಾರಣವೇನು? ಹೇಗೆ ಕೊಲೆ ಮಾಡಲಾಯ್ತು ಎಂಬ ವಿಚಾರವನ್ನು ಆರೋಪಿ ಬಾಯಿಬಿಟ್ಟಿದ್ದಾನೆ.

Comments

Leave a Reply

Your email address will not be published. Required fields are marked *