ಸರಿಯಾಗಿ ಕೆಲಸ ಮಾಡೋದಾದ್ರೆ ಮಾಡಿ, ಇಲ್ಲ ಹೊರಡಿ: ಎಸ್‍ಪಿ ವಿರುದ್ಧ ಈಶ್ವರಪ್ಪ ಗರಂ

ಶಿವಮೊಗ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಸರಿಯಾಗಿ ಕೆಲಸ ಮಾಡುವುದಾದರೆ ಮಾಡಿ, ಇಲ್ಲದಿದ್ದರೆ ಹೊರಡಿ. ಜಿಲ್ಲೆಗೆ ಬೇರೆಯವರನ್ನು ಹಾಕಿಸಿಕೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಎಸ್‍ಪಿ ವಿರುದ್ದ ಫುಲ್ ಗರಂ ಆಗಿದ್ದಾರೆ.

ಶಿವಮೊಗ್ಗದ ಸೀಗೆಹಟ್ಟಿ ಬಡಾವಣೆಯಲ್ಲಿ ಗುರುವಾರ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ವಾಹನಗಳಿಗೆ ಬೆಂಕಿ ಬಿದ್ದಿದ್ದ ಪ್ರದೇಶಕ್ಕೆ ಸಚಿವ ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಕಳೆದ ವಾರ ಸಹ ಶಿವಮೊಗ್ಗದ ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಹಾಗೂ ಲಾರಿಗೆ ಬೆಂಕಿ ಹಚ್ಚಲಾಗಿದೆ. ಕೊಲೆ ಪ್ರಕರಣಗಳು ನಡೆಯುತ್ತಿವೆ. ಹೀಗಿದ್ದರೂ ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ, ಇಂತಹ ಪ್ರಕರಣ ತಡೆಗಟ್ಟುವಲ್ಲಿ ಮುಂದಾಗಿಲ್ಲ ಎಂಬ ಅಸಮಾಧಾನ ಹೊರಹಾಕಿದರು.

ಇದೇ ವೇಳೆ ಸರಿಯಾಗಿ ಕೆಲಸ ಮಾಡುವುದಾದರೆ ಮಾಡಿ ಇಲ್ಲದಿದ್ದರೆ ಹೊರಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಎಚ್ಚರಿಕೆ ಸಹ ನೀಡಿದ್ದಾರೆ.

Comments

Leave a Reply

Your email address will not be published. Required fields are marked *