ವಿವಿಧ ಬೇಡಿಕೆ ಈಡೇರಿಕೆಗೆ ಆಶಾ ಕಾರ್ಯಕರ್ತರ ಆಗ್ರಹ- ಮೌರ್ಯ ಸರ್ಕಲ್‍ನಲ್ಲಿ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕಳೆದ 20 ದಿನಗಳಿಂದ ಹೋರಾಟ ಮಾಡುತ್ತಿದ್ದು, ಇಂದು ನಗರದ ಮೌರ್ಯ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾಸಿಕ ವೇತನ 12 ಸಾವಿರ ನಿಗದಿ ಹಾಗೂ ಕೊರೊನಾ ಸರ್ವೆ ಕೆಲಸ ಮಾಡುವ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಿಂದ ಆಶಾ ಕಾರ್ಯಕರ್ತೆಯರು ಆಗಮಿಸಿದ್ದಾರೆ.

ಸರ್ಕಾರ ಈಗ ನೀಡುತ್ತಿರುವ ಗೌರವ ಧನ ಸರಿಯಾಗಿ ಸಿಗುತ್ತಿಲ್ಲ. ಕೇವಲ 6 ಸಾವಿರ ರೂ ಗೌರವ ಧನ ಮಾತ್ರ ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ಹಣ ನಿಗಧಿಯಾಗಬೇಕು. ಕೊರೊನಾದಿಂದ ರಕ್ಷಣೆ ಮಾಡಿಕೊಳ್ಳಲು ಸುರಕ್ಷಿತ ಸಾಮಾಗ್ರಿಗಳನ್ನೂ ಮೊದಲು ಕೊಡಬೇಕು. ತಕ್ಷಣವೇ ಈ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಒತ್ತಾಯ ಮಾಡಿದ್ದಾರೆ.

ಬೆಂಗಳೂರು ಮಾತ್ರವಲ್ಲದೇ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿಯೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ. ಕಳೆದ 20 ದಿನಗಳಿಂದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಅವರೊಂದಿಗೆ ಚರ್ಚೆ ನಡೆಸಿಲ್ಲ.

Comments

Leave a Reply

Your email address will not be published. Required fields are marked *