ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ದುರಂತದಲ್ಲಿ ಪುಟ್ಟ ಕಂದಮ್ಮವೊಂದು ಬದುಕುಳಿದಿದೆ.

ವಿಮಾನ ಭೀಕರ ದುರಂತಕ್ಕೀಡಾದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗೆ ಪುಟ್ಟ ಮಗುವೊಂದು ಅಳುತ್ತಿರುವ ಶಬ್ದ ಕೇಳಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮಗುವಿನ ಅಳು ಕೇಳುತ್ತಿರುವ ಕಡೆ ತೆರಳಿ ರಕ್ಷಿಸಿದ್ದಾರೆ. ಘಟನೆಯಿಂದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಂಡ್ರೊಟ್ಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.

ಈ ಸಂಬಂಧ ಸಿವಿಲ್ ಪೊಲಿಸ್ ಅಧಿಕಾರಿ ಮಗುವನ್ನು ಹಿಡಿದ ಫೋಟೋದೊಂದಿಗೆ ಆಡಿಯೋ ಬಿಡುಗಡೆ ಮಾಡಿದ್ದು, ದುಬೈನಿಂದ ಬಂದ ವಿಮಾನ ಇಲ್ಲಿ ಅವಘಡಕ್ಕೆ ತುತ್ತಾಗಿದೆ. ಘಟನೆಯಲ್ಲಿ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಮಗುವಿಗೆ ಯಾರೂ ಇಲ್ಲ. ಮಗುವನ್ನು ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದ್ದಾರೆ.

ಇಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಗೆ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

Comments

Leave a Reply

Your email address will not be published. Required fields are marked *