ಶಿವಮೊಗ್ಗ-ರಾಣೇಬೆನ್ನೂರು ರೈಲ್ವೇ ಕಾಮಗಾರಿ ಶೀಘ್ರ ಪ್ರಾರಂಭ: ಸುರೇಶ್ ಅಂಗಡಿ

ಶಿವಮೊಗ್ಗ: ಶಿವಮೊಗ್ಗ – ಶಿಕಾರಿಪುರ – ರಾಣಿಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ವರ್ಚುವಲ್ ವೇದಿಕೆಯ ಮೂಲಕ ಬೆಳಗಾವಿಯ ತಮ್ಮ ಕಚೇರಿಯಿಂದಲೇ ಉದ್ಘಾಟಿಸಿ ಮಾತನಾಡಿದರು.

994 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ-ರಾಣೇಬೆನ್ನೂರ ಹೊಸ ರೈಲು ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಉಚಿತವಾಗಿ ಭೂಮಿ ಒದಗಿಸುವುದರ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಶೇ.50 ರಷ್ಟು ಯೋಜನಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ. ಅದೇ ರೀತಿ ದಾವಣಗೆರೆ-ಬೆಂಗಳೂರು ನಡುವೆ ಡಬಲ್ ಲೈನ್ ನಿರ್ಮಾಣಕ್ಕೂ ಜಮೀನು ಒದಗಿಸುವುದಾಗಿ ತಿಳಿಸಿದ್ದಾರೆ. ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದ ತಕ್ಷಣವೇ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮವನ್ನು ಇಲಾಖೆಯ ವತಿಯಿಂದ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಶಿವಮೊಗ್ಗ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಸಜ್ಜುಗೊಳಿಸಲಾಗಿದ್ದ ವರ್ಚುವಲ್ ವಿಡಿಯೋ ಮೂಲಕ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಾತನಾಡಿ, ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಎರಡು ಲಿಫ್ಟ್ ಗಳನ್ನು ನಿರ್ಮಿಸಲಾಗಿದ್ದು ಹಿರಿಯ ನಾಗರೀಕರಿಗೆ ಹಾಗೂ ಅಶಕ್ತ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಇದೇ ರೀತಿ ಆರ್.ಕೆ.ನಾರಾಯಣ್ ಅವರ ಖ್ಯಾತ `ಮಾಲ್ಗುಡಿ ಡೇಸ್’ ಕೃತಿಯನ್ನು ಟೆಲಿವಿಷನ್ ಸೀರಿಯಲ್ ಆಗಿ ನಿರ್ಮಿಸಿದ ಚಿತ್ರನಟ ದಿವಂಗತ ಶಂಕರನಾಗ್ ಅವರು ಇದೇ ರೈಲ್ವೇ ನಿಲ್ದಾಣವನ್ನು ಪ್ರಮುಖವಾಗಿ ಬಳಸಿಕೊಂಡಿದ್ದಾರೆ. ಇದರ ನೆನಪಿಗಾಗಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಹಳೆಯ ಸ್ಟೇಷನನ್ನು ಮಾಲ್ಗುಡಿ ಮ್ಯೂಸಿಯಂ ಆಗಿ ಪರಿವರ್ತಿಸಲಾಗಿದೆ. ಇಲ್ಲಿನ ಫ್ಲಾಟ್‍ಫಾರ್ಮ್ ವಿಸ್ತರಿಸಲಾಗಿದ್ದು, ಪ್ರಸ್ತುತ 12 ಕೋಚ್ ರೈಲುಗಳಿಗೆ ನಿಲುಗಡೆಗೆ ಅವಕಾಶವಿತ್ತು. ಇದೀಗ 28 ಕೋಚ್ ರೈಲುಗಳು ನಿಲ್ಲುವ ಸೌಲಭ್ಯ ಕಲ್ಪಿಸಲಾಗಿದೆ. ಇದೊಂದು ಪ್ರವಾಸಿ ತಾಣವಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲಿದೆ ಎಂದರು.

ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ 245 ಕೋಟಿ ವೆಚ್ಚವಾಗಲಿದ್ದು, ಇನ್ನೆರಡು ತಿಂಗಳಲ್ಲಿ ಭೂಸ್ವಾಧೀನ ಪೂರ್ಣಗೊಳ್ಳಲಿದೆ. ಇದೇ ರೀತಿ ಶಿವಮೊಗ್ಗ-ಹರಿಹರ ರೈಲು ಮಾರ್ಗ, ಬೀರೂರು ಡಬ್ಲಿಂಗ್ ಕಾರ್ಯ, ತಾಳಗುಪ್ಪ- ಸಿದ್ದಾಪುರ ಹಾಗೂ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ವರ್ಚುವಲ್ ವೇದಿಕೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *