ಕೃಷಿ ವಲಯದ ಮೂಲ ಸೌಕರ್ಯಗಳ ಅಭಿವೃದ್ಧಿ 1 ಲಕ್ಷ ಕೋಟಿ ರೂ. ಅನುದಾನ

– ಪಿಎಂ ಕಿಸಾನ್ ಸಮ್ಮಾನ್ ಯೋಜನೆ 6ನೇ ಕಂತು ಬಿಡುಗಡೆ

ನವದೆಹಲಿ: ಕೃಷಿ ವಲಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ 1 ಲಕ್ಷ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಜೊತೆಗೆ ಕಿಸಾನ್ ಸಮ್ಮಾನ್ ಯೋಜನೆ ಆರನೇ ಕಂತು ಬಿಡುಗಡೆ ಮಾಡಿದ್ದು, 8.55 ಕೋಟಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 17,100 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೃಷಿ ವಲಯದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ರೈತರ ಜೊತೆಗೆ ಸಂವಾದ ನಡೆಸಿದರು. ಸಂವಾದಕ್ಕೂ ಮುನ್ನ ಈ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿರವರೊಂದಿಗಿನ ಸಂವಾದಲ್ಲಿ ಹಾಸನ ಜಿಲ್ಲೆ ಕ್ಯಾತನಹಳ್ಳಿ ಗ್ರಾಮದ ಬಸವೇಗೌಡ ಮತ್ತು ತಂಡ ಭಾಗಿಯಾಗಿತ್ತು. ಈ ವೇಳೆ ಪ್ರಾಥಮಿಕ ಕೃಷಿ ಸಹಕಾರ ಸಂಘದ ಮೂಲಕ ಗ್ರಾಮದಲ್ಲಿ 1200 ಮೆಟ್ರಿಕ್ ಟನ್ ಉತ್ಪನ್ನಗಳ ದಾಸ್ತಾನಿಗಾಗಿ ಗೋದಾಮು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು. 40 ಲಕ್ಷ ಯೋಜನೆಯಡಿ ಸುಮಾರು 2500-3000 ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಬಸವೇಗೌಡ ಹೇಳಿದರು.

ಮುಂದಿನ ಮೂರು ತಿಂಗಳಗಳಲ್ಲಿ ಕಾಮಗಾರಿ ಮುಗಿಯಲಿದ್ದು, ನಬಾರ್ಡ್ ಬ್ಯಾಂಕ್ ನಿಂದ 32 ಲಕ್ಷ ಸಾಲ ಪಡೆಯಲಾಗಿದೆ. ಗೋದಾಮು ಸಿದ್ಧವಾದ ಬಳಿಕ ಕೃಪಿ ಉತ್ಪನ್ನಗಳನ್ನು ಸಂಗ್ರಹಿಸಿ ಉತ್ತಮ ಬೆಲೆ ಸಿಗುವ ವೇಳೆ ಮಾರಾಟ ಮಾಡಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು.

ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ರೈತರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದ ಕೃಷಿ ವಲಯದಲ್ಲಿ ಮೂಲ ಸೌಕರ್ಯಗಳ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಿದರು.

Comments

Leave a Reply

Your email address will not be published. Required fields are marked *