ಆರೋಗ್ಯಾಧಿಕಾರಿ ಆತ್ಮಹತ್ಯೆ- ಕೊರೊನಾ ವಾರಿಯರ್ಸ್‍ಗಳಲ್ಲಿ ಸುಧಾಕರ್ ಮನವಿ

ಬೆಂಗಳೂರು/ಮೈಸೂರು: ಅರಮನೆ ನಗರಿಯಲ್ಲಿ ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೊರೊನಾ ವಾರಿಯರ್ಸ್ ಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯಾಧಿಕಾರಿಯನ್ನು ನಾಗೇಂದ್ರ ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಅವರು ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಸುಧಾಕರ್ ಮನವಿ:
ಕೊರೊನಾ ವಾರಿಯರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸುಧಾಕರ್ ಅವರು ಟ್ವೀಟ್ ಮಾಡಿ, ಮೈಸೂರಿನ ನಂಜನಗೂಡು ತಾಲೂಕು ಕೋವಿಡ್ ವಾರಿಯರ್ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್ ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರ್ಕಾರ ಯಾವತ್ತೂ ಜೊತೆಗಿದೆ ಎಂದು ಬರೆದುಕೊಂಡಿದ್ದಾರೆ.

ಆತ್ಮಹತ್ಯೆ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ, ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ.

Comments

Leave a Reply

Your email address will not be published. Required fields are marked *