ಉರುಳಿದ ಬೃಹತ್ ಮರ – ಉಡುಪಿಯಲ್ಲಿ 1 ಗಂಟೆ ಹೆದ್ದಾರಿ ಜಾಮ್

ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಭೀಕರ ಚಂಡಮಾರುತ ಕರ್ನಾಟಕ ಕರಾವಳಿ ತೀರದಲ್ಲಿ ಭಾರಿ ಮಳೆ ಸುರಿಸಿದೆ. ಕಳೆದ ಮೂರು ದಿನಗಳಿಂದ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 117 ಮಿಲಿ ಮೀಟರ್ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 117 ಮಿಲಿಮೀಟರ್ ಸರಾಸರಿ ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಬಿದ್ದಿದ್ದು, 121 ಮಿಲಿಮೀಟರ್ ಮಳೆ ದಾಖಲಾಗಿದೆ. ಕುಂದಾಪುರ ತಾಲೂಕಿನಲ್ಲಿ 110, ಕಾರ್ಕಳದಲ್ಲಿ 110 ಮಿಲಿ ಮೀಟರ್ ಮಳೆ ಬಿದ್ದಿದೆ.

ಈ ನಡುವೆ ಮಣಿಪಾಲ ಸಮೀಪದ ಪರ್ಕಳದಲ್ಲಿ ಮಳೆಗೆ ಭಾರೀ ಗಾತ್ರದ ಮರವೊಂದು ಧರೆಗುರುಳಿದೆ. ಸುಮಾರು ಒಂದು ಗಂಟೆ ಕಾಲ ರಸ್ತೆ ಸಂಚಾರಕ್ಕೆ ತೊಡಕುಂಟಾಯಿತು. ನಗರಸಭೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು. ಕೆಲವೆಡೆ ವಿದ್ಯುತ್ ಕಂಬಗಳಿಗೆ ಮರ ಬಿದ್ದಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಮುದ್ರ ತಟದಲ್ಲಿ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ನಾಡದೋಣಿ, ಆಳಸಮುದ್ರ ಮೀನುಗಾರರು ಕಡಲಿಗೆ ಇಳಿದಿಲ್ಲ.

Comments

Leave a Reply

Your email address will not be published. Required fields are marked *