ಎಸ್ಮಾ ಜಾರಿ ಮಾಡುವ ಚಿಂತನೆ ಇದೆ: ಬಸವರಾಜ್ ಬೊಮ್ಮಾಯಿ

– ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಿಎಂ ಕರೆ

ಬೆಂಗಳೂರು: ಕರ್ನಾಟಕದಲ್ಲಿ ಈ ಹಿಂದೆಯೂ ಎಸ್ಮಾ ಕಾಯ್ದೆ ಜಾರಿಯಾಗಿತ್ತು. ಈಗಲೂ ಜಾರಿ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಕರೆದ ತುರ್ತುಸಭೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಬೆಳಗ್ಗೆ 10 ಗಂಟೆಯಿಂದ ಮಾತುಕತೆ ನಡೆಸಲಾಗಿತ್ತು. ಎಲ್ಲರೂ ಸಂಧಾನದಲ್ಲಿ ಒಪ್ಪಿಗೆ ಕೊಟ್ಟು, ಮಾಧ್ಯಮಗಳ ಮುಂದೆ ಸಕಾರಾತ್ಮಕವಾಗಿದೆ ಅಂತ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದರು. ಅಲ್ಲಿ ಹೋಗಿ ಕೆಲವರ ಮಾತು ಕೇಳಿರುವ ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲಿಯೂ ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿದ್ದೇವೆ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಷ್ಠೆಗೆ ಸಾರಿಗೆ ನಿಗಮ ಹಾಳಾಗುತ್ತದೆ. ಕೋಡಿಹಳ್ಳಿ ಚಂದ್ರಶೇಖರ್ ಇಲ್ಲೊಂದು, ಅಲ್ಲೊಂದು ಹೇಳೋದನ್ನ ಖಂಡಿಸುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಿಗೆ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ. ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ಸಂಸ್ಥೆಯ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಿಎಂ ಕರೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *