ಸಿಲಿಂಡರ್ ಸ್ಫೋಟ ಮೂರು ಮನೆ ಜಖಂ – ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿ ಹಾನಿ

ಮಡಿಕೇರಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ನಡೆದಿದೆ.

ಮಂದಣ್ಣ ಎಂಬುವರಿಗೆ ಸೇರಿದ ಲೈನ್ ಮನೆಯಲ್ಲಿ ಕಾಫಿ ತೋಟದ ಕೂಲಿ ಕಾರ್ಮಿಕರು ವಾಸವಾಗಿದ್ದಾರೆ. ಸೋಮಯ್ಯ, ವಿಜಯ ಮತ್ತು ರಶ್ಮಿ ಎಂಬುವರು ಲೈನ್ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಮದ್ಯಾಹ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಹೋಗಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ. ಅದರೆ ಮನೆಯಲ್ಲಿ ಇದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ಮಕ್ಕಳ ಪುಸ್ತಕಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟ ಭಸ್ಮವಾಗಿದೆ.

ಕೂಲಿ ಕಾರ್ಮಿಕರು ಮನೆಯ ವಸ್ತುಗಳನ್ನು ಸಣ್ಣ ಫೈನಾನ್ಸ್‍ಗಳಲ್ಲಿ ಸಾಲ ಪಡೆದು ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ತೆಗೆದುಕೊಂಡಿದ್ದರು. ಬೆಂಕಿ ಜ್ವಾಲೆಗೆ ವಸ್ತುಗಳು ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಪ್ರಕರಣ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಅಗಿದೆ.

Comments

Leave a Reply

Your email address will not be published. Required fields are marked *