ಮೈಸೂರು: ಜಿಲ್ಲೆಯಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ ಕೆಲವು ಟಫ್ ರೂಲ್ಸ್ ಗಳನ್ನು ಹಾಕಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಂದಾಗಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಹಲವು ರಜೆಗಳು ಇರುವುದರಿಂದಾಗಿ ಮೈಸೂರಿಗೆ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಈ ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಾಗಾಗಿ ಮೈಸೂರಲ್ಲಿ ಕೆಲವು ಟಫ್ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದರು.

ಜಿಲ್ಲೆಯಲ್ಲಿ ಕೊರೊನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತ ಕೆಲವು ಕ್ರಮಕ್ಕೆ ಮುಂದಾಗಿದ್ದು, ಈ ಪ್ರಕಾರ ಏಪ್ರಿಲ್ 10 ರಿಂದ ಏಪ್ರಿಲ್ 20ರ ವರೆಗೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಹೋಗಲು, ಚಿತ್ರಮಂದಿರಗಳಿಗೆ ತೆರಳಲು ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ನಾವು ಮೈಸೂರಿನಲ್ಲಿರುವ ಯಾವುದೇ ಪ್ರವಾಸಿತಾಣಗಳನ್ನು ಮುಚ್ಚುತಿಲ್ಲ ಬದಲಾಗಿ ಕೆಲವು ನಿಯಮಗಳನ್ನು ಜಾರಿಗೆ ತಂದಿದ್ದೇವೆ. ರಜೆಯ ಇರುವುದರಿಂದಾಗಿ ಪ್ರವಾಸಿಗರು ಬರುವ ನಿರೀಕ್ಷೆ ಇದ್ದು ಈ ಸಂದರ್ಭ ಜನ ಸಂದಣಿ ಜಾಸ್ತಿ ಇರುವ ಪ್ರದೇಶಗಳಲ್ಲಿ ನಿಗಾ ವಹಿಸಲಾಗುವುದು, ಈ ಎಲ್ಲಾ ಕಾರ್ಯಗಳಿಗಾಗಿ ಈಗಾಗಲೇ ಜಿಲ್ಲೆಯಲ್ಲಿ 300 ಹೋಂ ಗಾರ್ಡ್ಗಳನ್ನು ನೇಮಕ ಮಾಡಿದ್ದೇವೆ. ಮೈಸೂರಿಗೆ ಪ್ರವಾಸಕ್ಕೆ ಬರುವವರು ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.
ಅದೇ ರೀತಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಸಭೆ ಸಮಾರಂಭಗಳಿಗೆ ಪೊಲೀಸ್ ಇಲಾಖೆಯಿಂದ ಒಪ್ಪಿಗೆ ಪಡೆದುಕೊಂಡು ಸಮಾರಂಭಗಳನ್ನು ನಡೆಸಬೇಕೆಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಂಡರು.

Leave a Reply