ಬೆಳ್ಳಂದೂರು ಡಿನೋಟಿಫಿಕೇಷನ್ ಕೇಸ್: ಸಿಎಂ ಯಡಿಯೂರಪ್ಪಗೆ ಸಂಕಷ್ಟ

– ಮರು ತನಿಖೆಗೆ ಆದೇಶಿಸಿದ ಲೋಕಾಯುಕ್ತ ಕೋರ್ಟ್

ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಲೋಕಾಯುಕ್ತ ಕೋರ್ಟ್ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ.

ಸಮಯ ವ್ಯರ್ಥ ಮಾಡದೇ ತನಿಖೆ ನಡೆಸುವಂತೆ ತನಿಖಾಧಿಕಾರಿ, ಲೋಕಾಯುಕ್ತ ಡಿವೈಎಸ್‍ಪಿ ಗೆ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆ ನಡೆಸಿ, ಬಳಿಕ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಿದೆ. ವಾಸುದೇವ ರೆಡ್ಡಿ ಸಲ್ಲಿಕೆ ಮಾಡಿದ್ದ ದೂರಿನ ಅನ್ವಯ ಕೋರ್ಟ್ ತನಿಖೆಗೆ ಆದೇಶಿಸಿದೆ. ತನಿಖೆಯ ನೆಪದಲ್ಲಿ ಸಮಯ ವ್ಯರ್ಥ ಮಾಡದೇ ಬೇಗ ತನಿಖೆ ನಡೆಸುವಂತೆ ತನಿಖಾಧಿಕಾರಿಗೆ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ದೂರನ್ನು ವಾಸುದೇವ ರೆಡ್ಡಿ ಸಲ್ಲಿಕೆ ಮಾಡಿದ್ದರು.

ಪ್ರಕರಣದ ಹಿನ್ನೆಲೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವಂತೆ 2015ರ ಫೆ.18ರಂದು ಲೋಕಾಯುಕ್ತ ಕೋರ್ಟ್ ಆದೇಶಿಸಿತ್ತು. 2019ರ ಜ.25ಕ್ಕೆ ಯಡಿಯೂರಪ್ಪ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಏ.2ರಂದು ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ನಡುವಿನ ನಾಲ್ಕು ವರ್ಷದಲ್ಲಿ ಪ್ರಕರಣದ ತನಿಖೆ ನಡೆಸುವುದಕ್ಕೆ ಯಾವುದೇ ನ್ಯಾಯಾಲಯದಿಂದಲೂ ತಡೆಯಾಜ್ಞೆ ಇರಲಿಲ್ಲ. ಆದರೂ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಿಲ್ಲ.

ತನಿಖೆ ನಡೆಸದಿರುವುದಕ್ಕೆ ಮತ್ತು ಅರ್ಜಿ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಆಕ್ಷೇಪಣೆ ಒಪ್ಪುವಂತಹದಲ್ಲ. ಉನ್ನತ ಹುದ್ದೆಯಲ್ಲಿರುವವರ ವಿರುದ್ಧದ ಪ್ರಕರಣಗಳು ತನಿಖೆ ಪ್ರಗತಿ ಕಾಣದಿದ್ದರೆ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆ-ವಿಶ್ವಾಸವನ್ನು ಸಾರ್ವಜನಿಕರು ಕಳೆದುಕೊಳ್ಳುವ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಆದೇಶದಲ್ಲಿ ಅಭಿಪ್ರಾಯಪಟ್ಟ ಹೈಕೋರ್ಟ್, ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ನಡೆಸುವಂತೆ ಲೋಕಾಯುಕ್ತ ಕೋರ್ಟ್‍ಗೆ ನಿರ್ದೇಶಿಸಿದೆ.

Comments

Leave a Reply

Your email address will not be published. Required fields are marked *