ಅಂಧ ಸೋದರಿಯರಿಗೆ ಬೆಳಕಾದ ಜಗ್ಗೇಶ್

ಬೆಂಗಳೂರು: ಅಂಧ ಸಹೋದರಿಯರ ಕಷ್ಟವನ್ನು ಆಲಿಸಿದ ನವರಸ ನಾಯಕ ಜಗ್ಗೇಶ್ ಅವರ ಬಡ ಕುಟುಂಬಕ್ಕೆ ಸಹಾಯದ ಹಸ್ತವನ್ನು ಚಾಚಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಪಮ ಶೋಗೆ ತುಮಕೂರಿನ ಮಧುಗಿರಿ ತಾಲೂಕಿನ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಹೋದರಿಯರು ಬಂದಿದ್ದರು. ಈ ವೇಳೆ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಇದೀಗ ಈ ಅಂಧ ಸಹೋದರಿಯರ ಬದುಕಿಗೆ ನವರಸ ಜಗ್ಗೇಶ್ ಬೆಳಕಾಗಿದ್ದಾರೆ.

ಸಹೋದರಿಯ ನೋವಿನ ಕಥೆ ಕೇಳಿದ ನವರಸ ನಾಯಕ ಜಗ್ಗೇಶ್ ಅವರ ಕಷ್ಟಕ್ಕೆ ಸಹಾಯದ ಹಸ್ತ ಚಾಚಿದ್ದಾರೆ. ಸಹೋದರಿಯರ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದಾರೆ.

ಜಗ್ಗೇಶ್ ಅವರ ಈ ಮಾನವೀಯ ನಡೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಕೂಡ ಸಹೋದರಿಯರ ಸಹಾಯಕ್ಕೆ ಮುಂದಾಗಿದ್ದಾರೆ. ನನಗೆ ಶಕ್ತಿ ಇರುವವರೆಗೂ ನಿಮ್ಮ ಮನೆಗೆ ಪ್ರತಿ ತಿಂಗಳ ಊಟಕ್ಕೆ ಏನು ಬೇಕು ಅದು ನನ್ನ ಕಡೆಯಿಂದ ಸಿಗಲಿದೆ ಎಂದು ಭರವಸೆ ಕೊಟ್ಟಿದ್ದಾರೆ.

https://www.instagram.com/p/B8alhdFpw-j/?igshid=1k84g3s74w787

ಸಹೋದರಿಯರಿಗೆ ಹುಟ್ಟಿನಿಂದ ಕಣ್ಣಿಲ್ಲ. ಇವರು ಒಟ್ಟು ನಾಲ್ಕು ಜನ ಮಕ್ಕಳು, ಅವರಲ್ಲಿ ಇಬ್ಬರಿಗೆ ಕಣ್ಣಿಲ್ಲ. ಗಂಡು ಮಗ ಇದ್ದನು. ಆತನೂ ಕೂಡ ಕಾಯಿಲೆಯಿಂದ ಮೃತಪಟ್ಟಿದ್ದಾನೆ. ತಾಯಿಯೂ ಕೂಡ ಸಾವನ್ನಪ್ಪಿದು, ಅಜ್ಜಿ ಜೊತೆ ವಾಸವಾಗಿದ್ದಾರೆ. ತಂದೆಯೂ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಷ್ಟದಲ್ಲೂ ಅಂಧ ಸಹೋದರಿಯರು ಸಂಸಾರದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಊಟಕ್ಕಾಗಿ ರತ್ಮಮ್ಮ ಮತ್ತು ಮಂಜಮ್ಮ ಊರಿನ ದಂಡಿನ ಮಾರಮ್ಮ ದೇವಾಲಯದ ಮುಂದೆ ಹಾಡು ಹೇಳಲು ಶುರು ಮಾಡಿದರು. ಅಲ್ಲಿಗೆ ಬರುವ ಭಕ್ತರು ನೀಡುವ ಹಣದಿಂದ ಸಂಸಾರವನ್ನು ನಡೆಸುತ್ತಿದ್ದಾರೆ.

 

Comments

Leave a Reply

Your email address will not be published. Required fields are marked *