ಪ್ರಧಾನಿ ಮೋದಿ ಮಾಜಿಯಾಗಲು ಒಂದೇ ತಿಂಗಳು ಬಾಕಿ: ಓವೈಸಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿಯಾಗಲು ಒಂದೇ ತಿಂಗಳು ಬಾಕಿ ಉಳಿದಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಭಯೋತ್ಪಾದನೆ ನಿಗ್ರಹ, ದೇಶದ ಭದ್ರತೆ ವಿಚಾರವಾಗಿ ಹೇಳಿದ್ದನ್ನೆ ಪುನರುಚ್ಚರಿಸುತ್ತಿದ್ದಾರೆ ಎಂದರು. ಇದನ್ನು ಓದಿ: ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರಿಗೆ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದ್ದು ಯಾಕೆ ಎಂದು ಬಿಜೆಪಿ, ಎನ್‍ಡಿಎ ನೇತೃತ್ವದ ಸರ್ಕಾರ ಹಾಗೂ ಶಿವಸೇನೆ ಉತ್ತರಿಸಲಿ. ಈ ಸ್ಫೋಟ ಪ್ರಕರಣದಲ್ಲಿ 6 ಜನ ಅಮಾಯಕರು ಪ್ರಾಣ ಕಳೆದುಕೊಂಡರೆ, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಎಂದು ತಿಳಿಸಿದರು.

ಸಾಧ್ವಿ ಪ್ರಜ್ಞಾಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ಖಂಡಿಸಿದ ಓವೈಸಿ ಅವರು, ಭಯೋತ್ಪಾದನೆ ವಿರುದ್ಧ ಹೋರಾಡುವ ಪುರಾವೆ ಇದೇನಾ? ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಮಹಿಳೆ ಪಕ್ಷದ ಟಿಕೆಟ್ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ತನ್ನ ಶಾಪದಿಂದಲೇ ಮೃತಪಟ್ಟರು ಎಂದು ಸಾಧ್ವಿ ಪ್ರಜ್ಞಾಸಿಂಗ್ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದಾಗಿ ಮಹಾರಾಷ್ಟ್ರದಲ್ಲಿ ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡುತ್ತಾರೆ? ಹೇಮಂತ್ ಕರ್ಕರೆ ಒಬ್ಬ ಹಿಂದೂ, ಮುಸ್ಲಿಂ ಎನ್ನುವುದು ಮುಖ್ಯವಲ್ಲ. ಅವರು ಭಾರತದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು ಎಂದು ನೆನೆದರು.

ಸಾಧ್ವಿ ಪ್ರಜ್ಞಾಸಿಂಗ್ ಹೇಳಿದ್ದೇನು?:
ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ತನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು. ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂಪಡೆಯುತ್ತೇನೆ ಮತ್ತು ಕ್ಷಮೆ ಕೋರುತ್ತೇನೆ ಎಂದು ಸಾಧ್ವಿ ಪ್ರತಿಕ್ರಿಯೆ ನೀಡಿದ್ದರು.

Comments

Leave a Reply

Your email address will not be published. Required fields are marked *