ಮಗನ ಒಳಿತಿಗಾಗಿ ಒಂದು ಕಾಲು ರೂಪಾಯಿ ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ!

ಮಂಡ್ಯ: ನಟ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಮಂಡ್ಯ ಲೋಕಸಭಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದ್ದು, ಒಂದೆಡೆ ನಿಖಿಲ್ ಸ್ಪರ್ಧಿಸುವ ಸುಳಿವು ನೀಡಿದ್ರೆ, ಮತ್ತೊಂದೆಡೆ ನಿಖಿಲ್ ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಗನ ರಾಜಕೀಯ ಭವಿಷ್ಯದ ಒಳಿತಿಗೆ ಹರಕೆ ಹೊತ್ತಿದ್ದಾರೆ.

ನಿಖಿಲ್ ತಾಯಿ ಹಾಗೂ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪುತ್ರನಿಗಾಗಿ ಒಂದು ಕಾಲು ರೂಪಾಯಿ ಹರಕೆ ಹೊತ್ತಿದ್ದಾರೆ. ಒಂದು ಕಾಲು ರೂಪಾಯಿ ಹರಕೆ ಹೊತ್ತರೆ, ಇಷ್ಠಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅನಿತಾ ಕುಮಾರಸ್ವಾಮಿ, ನಾನು ನನ್ನ ಮಗನಿಗೆ ಒಳ್ಳೆಯದಾಗಲಿ ಎಂದು ಪೂಜೆ ಸಲ್ಲಿಸಿದ್ದೇನೆ ಅಂತಿದ್ದಾರೆ. ಇದೇ ವೇಳೆ ಮಂಡ್ಯದಿಂದ ಸುಮಲತಾ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿ, ಆ ಬಗ್ಗೆ ನಾನೇನು ಮಾತನಾಡಲ್ಲ. ಆದರೆ ಮಂಡ್ಯ ಜೆಡಿಎಸ್ ಬೆಲ್ಟ್ ಎನ್ನುವ ಮೂಲಕ ತಮ್ಮ ಮಗನ ಸ್ಪರ್ಧೆ ಬಗ್ಗೆಯೂ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್‍ನ ಮೈತ್ರಿ ಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಸ್ಪರ್ಧೆ ಬಹುತೇಕ ಖಚಿತವಾಗಿದೆ ಅನ್ನೋ ಚರ್ಚೆ ಮಂಡ್ಯ ಜಿಲ್ಲೆಯಲ್ಲಿ ಜೋರಾಗಿರುವಾಗಲೇ ತಾಯಿ ಅನಿತಾ ಕುಮಾರಸ್ವಾಮಿ ಮಗನ ಶ್ರೇಯೋಭಿವೃದ್ಧಿಗಾಗಿ ದೇವರಲ್ಲಿ ಹರಕೆ ಹೊತ್ತಿದ್ದಾರೆ. ಇತ್ತ ನಿಖಿಲ್ ಕೂಡ ತಮ್ಮ ಸ್ಪರ್ಧೆ ಬಗ್ಗೆ ಮಾತನಾಡುತ್ತ, ಜಿಲ್ಲೆಯ ಜನರ ಭಾವನೆಗಳನ್ನು ಅರ್ಥೈಸಿಕೊಂಡು ನಮ್ಮ ಪಕ್ಷದ ನಾಯಕರು ತೀರ್ಮಾನ ಕೈಗೊಳ್ತಾರೆ ಅಂತಿದ್ದಾರೆ. ಈ ಮೂಲಕ ಈಗಾಗಲೇ ನಿಖಿಲ್ ಸ್ಪರ್ಧೆಗೆ ಒತ್ತಡ ಹೇರುತ್ತಿರುವ ಮುಖಂಡರ ಮನವಿಗೆ ಪಕ್ಷ ಸ್ಪಂದಿಸುತ್ತದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದು, ತಮ್ಮ ಸ್ಪರ್ಧೆಯ ಬಗ್ಗೆ ಖಚಿತ ಪಡಿಸಿದ್ದಾರೆ.

ಸಕ್ಕರೆ ನಾಡಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಕೂಟದಿಂದ ನಿಖಿಲ್ ಕುಮಾರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಸ್ಪರ್ಧೆ ಬಹುತೇಕ ಖಚಿತವಾಗಿದೆ ಎಂಬ ಚರ್ಚೆ ಜಿಲ್ಲೆಯಾದ್ಯಂತ ಜೋರಾಗಿ ಶುರುವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *