ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

ನವದೆಹಲಿ: ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ಹಿನ್ನೆಲೆ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ. ಪ್ರಕಾಶಮಾನ ದಿನವಾದ ಇಂದು ನನಗೆ ಎಂತಹ ಸಂತಸದ ಸುದ್ದಿ ಸಿಕ್ಕಿದೆ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. 700ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಅವರೆಲ್ಲರ ಬಲಿದಾನ ಅಮರವಾಗಿ ಉಳಿಯುತ್ತದೆ. ಕೃಷಿ ಮತ್ತು ರೈತರನ್ನು ಉಳಿಸಲು ಈ ದೇಶದ ರೈತರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂಬುವುದನ್ನು ಮುಂಬರುವ ಪೀಳಿಗೆಯವರಿಗೆ ಸದಾ ನೆನಪಿಸುತ್ತಿರುತ್ತದೆ. ನನ್ನ ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ಜಾರಿಗೊಳಿಸಿತ್ತು. ಈ ಕುರಿತಂತೆ ದೇಶದ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಅಂದಿನಿಂದ ಇಂದಿನವರೆಗೂ ರೈತರು ಕೃಷಿ ಕಾನೂನನ್ನು ವಾಪಸ್ಸು ಪಡೆಯುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸಲು ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

Comments

Leave a Reply

Your email address will not be published. Required fields are marked *