ಜಮೀನಿಗೆ ಹೋಗುತ್ತಿದ್ದಾಗ ಕರಡಿ ದಾಳಿ- ಮಹಿಳೆ ಗಂಭೀರ

ದಾವಣಗೆರೆ: ಕರಡಿ ದಾಳಿ ಮಾಡಿ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿಪುರ ಗ್ರಾಮದಲ್ಲಿ ನಡೆದಿದೆ.

ಶಾಂತಮ್ಮ (55) ಕರಡಿ ದಾಳಿಗೆ ಒಳಗಾದ ಮಹಿಳೆ. ಇವರು ಉಚ್ಚಂಗಿದುರ್ಗದ ವಾಸಿಯಾಗಿದ್ದು, ಇಂದು ಬೆಳಗ್ಗೆ 7-30ರ ಸುಮಾರಿಗೆ ತನ್ನ ಜಮೀನಿಗೆ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಕರಡಿಯೊಂದು ಅವರ ಮೇಲೆ ಏಕಾಏಕಿ ದಾಳಿ ನಡೆಸಿದೆ.

ದಾಳಿ ವೇಳೆ ಜೋರಾಗಿ ಮಹಿಳೆ ಕಿರುಚಿಕೊಂಡಿದ್ದಾರೆ. ಇದನ್ನು ಕೇಳಿ ಅಲ್ಲೇ ಇದ್ದ ಗ್ರಾಮಸ್ಥರು ಬಂದು ಕರಡಿಯನ್ನು ಓಡಿಸಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದಲ್ಲಿ ಮೊದಲಿನಿಂದಲೂ ಕರಡಿ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಮನವಿ ಮಾಡಿದ್ದರೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇಂದು ಮಹಿಳೆಯ ಮೇಲಿನ ದಾಳಿಯನ್ನು ಖಂಡಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *