ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಎಲೆಕ್ಷನ್- ರಾಜಕೀಯ ತಲ್ಲಣ

-ಪ್ರತಿಷ್ಠೆ ಪಣಕ್ಕಿಟ್ಟ ರಮೇಶ್ ಜಾರಕಿಹೊಳಿ-ಉಮೇಶ್ ಕತ್ತಿ-ಲಕ್ಷ್ಮಣ ಸವದಿ

ಬೆಳಗಾವಿ: ಕುಂದಾನಗರಿಯಲ್ಲಿ ಡಿಸಿಸಿ ಬ್ಯಾಂಕ್‍ಗೆ ಚುನಾವಣೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸುತ್ತಾ ಎಂಬ ಆತಂಕ ಬಿಜೆಪಿ ನಾಯಕರಲ್ಲಿ ಹುಟ್ಟಿಕೊಂಡಿದೆ. ಕಳೆದ ಬಾರಿ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಜಟಾಪಟಿಯಿಂದ ಹೊತ್ತಿಕೊಂಡಿದ್ದ ಸಣ್ಣ ಕಿಡಿ ಮೈತ್ರಿ ಸರ್ಕಾರವನ್ನು ಉರುಳಿಸಿತ್ತು. ಇದೀಗ ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಏನಾಗುತ್ತೋ ಅನ್ನೋ ಆತಂಕ ಕಮಲ ನಾಯಕರಲ್ಲಿ ಮನೆ ಮಾಡಿದೆ.

ಪ್ರತಿಷ್ಠೆ ಪಣಕ್ಕಿಟ್ಟ ನಾಯಕರು: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಳಗಾವಿಯ ಮೂವರು ಬಿಜೆಪಿ ನಾಯಕರು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಆಪ್ತನಾಗಿರುವ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೊಡಿಸಲು ಮುಂದಾಗಿದ್ದಾರೆ. ಇತ್ತ ಬೆಳಗಾವಿ ಜಿಲ್ಲೆಯ ಮತ್ತೋರ್ವ ಪ್ರಭಾವಿ ಶಾಸಕ ಉಮೇಶ್ ಕತ್ತಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಸೋದರ ರಮೇಶ್ ಕತ್ತಿಯನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಉಮೇಶ್ ಕತ್ತಿ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸಹ ಇಬ್ಬರಿಗೂ ಅಧ್ಯಕ್ಷ ಸ್ಥಾನ ತಪ್ಪಿಸಲು ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಬಾರಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಕಿಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸೋದರರ ನಡುವಿನ ಕಿತ್ತಾಟವೇ ಮೈತ್ರಿ ಸರ್ಕಾರ ಉರಳಲು ಮುನ್ನಡಿ ಬರೆದಿತ್ತು ಎಂದು ಹೇಳಲಾಗುತ್ತದೆ. ಹೀಗಾಗಿ ಸಿಎಂ ಸಹ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿಮ್ಮ ಸಹವಾಸಕ್ಕೆ ನಾನು ಬರಲ್ಲ. ಚುನಾವಣೆಗೆ ಸಂಬಂಧಿಸಿದ ವಿಚಾರಗಳಿಗೂ ನನ್ನನ್ನು ಕರೆಯಬೇಡಿ ಎಂಬ ಸಂದೇಶವನ್ನು ಮುಖ್ಯಮಂತ್ರಿಗಳು ಬೆಳಗಾವಿ ನಾಯಕರಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂವರು ನಾಯಕರು ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲ ಪಡೆಯಲು ಮುಂದಾಗಿದ್ದು, ಸಿಎಂ ಯಾರಿಗೆ ಜೈ ಅನ್ನೋತ್ತಾರೆ ಅನ್ನೋದು ಸದ್ಯದ ಕುತೂಹಲ.

Comments

Leave a Reply

Your email address will not be published. Required fields are marked *