ಮೂರ್ನಾಲ್ಕು ಬಾರಿ ಬಸ್ ಪಲ್ಟಿ ಹೊಡೆದ್ರೂ 32 ಜನ ಪ್ರಯಾಣಿಕರು ಪಾರು

– 25ಕ್ಕೂ ಹೆಚ್ಚು ಜನರಿಗೆ ಗಾಯ

ಬಳ್ಳಾರಿ: ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಪಲ್ಟಿಯಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಹೊರವಲಯದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಈ ಘಟನೆಯಲ್ಲಿ 25 ಜನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಎಸ್‍ಆರ್‌ಎಂಎಸ್ ಖಾಸಗಿ ಸಂಸ್ಥೆಗೆ ಸೇರಿದ್ದ ಬಸ್ 32 ಜನ ಪ್ರಯಾಣಿಕರನ್ನು ಹೊತ್ತು ಬಳ್ಳಾರಿಯಿಂದ ದಾವಣಗೆರೆಗೆ ಹೋಗುತ್ತಿತ್ತು. ಬಸ್‍ನಲ್ಲಿ ಹೆಚ್ಚಾಗಿ ದಾವಣಗೆರೆ, ಚನ್ನಗಿರಿ ಹಾಗೂ ಕೂಡ್ಲಿಗಿ ತಾಲೂಕಿನ ಜನರಿದ್ದರು. ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಸಮೀಪ ರಸ್ತೆ ಇಕ್ಕಟ್ಟಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, 25 ಜನರು ಗಾಯಗೊಂಡಿದ್ದಾರೆ.

ಬಸ್ ಅಪಘಾತವಾಗಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಗುಡೇಕೋಟೆ ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *