ಇಂದಿನಿಂದ ರಸೆಲ್ ಮಾರ್ಕೆಟ್ ಸಂಪೂರ್ಣ ಬಂದ್

ಬೆಂಗಳೂರು: ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾಗಿದ್ದರಿಂದ ಪಾಲಿಕೆ ಇಂದಿನಿಂದ ರಸೆಲ್ ಮಾರ್ಕೆಟ್ ಸಂಪೂರ್ಣ ಬಂದ್ ಮಾಡುವಂತೆ ಆದೇಶಿಸಿದೆ.

ಬೆಂಗಳೂರಿನ ಶಿವಾಜಿನಗರದ ರಸೆಲ್ ಮಾರ್ಕೆಟ್ ಇಂದಿನಿಂದ ಏಪ್ರಿಲ್ 14ರವರೆಗೂ ಬಂದ್ ಆಗಲಿದ್ದು, ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ಬಿಬಿಎಂಪಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಮಾರ್ಕೆಟ್‍ನ ಎಲ್ಲಾ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿದ್ದಾರೆ.

ಕೊರೊನಾ ವೈರಸ್‍ನಿಂದ ಪ್ರಧಾನಿ ಮೋದಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿ 10 ದಿನಗಳಾಗಿವೆ. ಆದರೂ ರಸೆಲ್ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಯುತ್ತಿತ್ತು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಾರ್ಕೆಟ್‍ನಲ್ಲಿ ಗುಂಪು ಗುಂಪಾಗಿ ಸೇರುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿ ಅನೇಕ ಬಾರಿ ಎಚ್ಚರಿಕೆ ಕೊಟ್ಟಿದ್ದರು. ಆದರೆ ಎಚ್ಚರಿಕೆ ಬಳಿಕವೂ ಜನರು ಗುಂಪು ಗುಂಪಾಗಿ ಸೇರುತ್ತಿದ್ದರು.

ಕೊನೆಗೆ ಬಿಬಿಎಂಪಿ ರಸೆಲ್ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಬಂದ್ ಮಾಡುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ. ಈಗಾಗಲೇ ವ್ಯಾಪಾರಕ್ಕೆ ಬಂದ ಗ್ರಾಹಕರನ್ನ ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ. ಅಲ್ಲದೇ ಬೀದಿ ಬದಿಯ ಅಂಗಡಿಗಳನ್ನ ತೆಗೆಯುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಇನ್ನೂ ಈ ರಸ್ತೆಯಲ್ಲಿ ಸಾರ್ವಜನಿಕರ ಓಡಾಟಕ್ಕೂ ಪೊಲೀಸರು ಬ್ರೇಕ್ ಹಾಕಿದ್ದಾರೆ. ಏಪ್ರಿಲ್ 14ವರೆಗೂ ತಾತ್ಕಾಲಿಕವಾಗಿ ರಸೆಲ್ ಮಾರ್ಕೆಟ್ ಬಂದ್ ಆಗಿದೆ.

Comments

Leave a Reply

Your email address will not be published. Required fields are marked *