ಬಿಜೆಪಿ ಸೇರುವ ಬಗ್ಗೆ ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ನನ್ನ ಕ್ಷೇತ್ರಕ್ಕೆ ನಾಲ್ಕು ಬಾರಿ ಹೋಗಿ ಬಂದಿದ್ದೇನೆ. ಕ್ಷೇತ್ರದ ಜನರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಸಿಎಂ ಗೃಹ ಕಚೇರಿಯಲ್ಲಿ ಯಡಿಯೂರಪ್ಪ ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿದೆ. ಹಾಗಾಗಿ ನಾನು ಕಾಂಗ್ರೆಸ್‍ನಲ್ಲಿ ಇಲ್ಲ ಎಂದರು.

ಸುಪ್ರೀಂಕೋರ್ಟಿನಲ್ಲಿ ಅನರ್ಹತೆ ತೀರ್ಪು ಪ್ರಶ್ನಿಸಿದ್ದೇವೆ. ಮುಂದಿನ ವಾರ ಅರ್ಜಿ ವಿಚಾರಣೆಗೆ ಬರಬಹುದು. ಸುಪ್ರೀಂಕೋರ್ಟ್ ಅಯೋಧ್ಯೆ ಕುರಿತ ಅರ್ಜಿಗಳ ವಿಚಾರಣೆ ಮಾಡುತ್ತಿದೆ. ಹಾಗಾಗಿ ನಮ್ಮ ಅರ್ಜಿ ವಿಚಾರಣೆ ವಿಳಂಬವಾಗಿದೆ ಎಂದು ತಿಳಿಸಿದರು.

ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚೆ ಮಾಡಿಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಕ್ಷೇತ್ರಕ್ಕೆ ನಾಲ್ಕು ಬಾರಿ ಹೋಗಿ ಬಂದಿದ್ದೇನೆ. ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವ ಸಂಬಂಧ ಸಿಎಂ ಭೇಟಿ ಮಾಡಿದ್ದೇನೆ. ಅನುದಾನ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ. ಕುಟುಂಬದವರ ರಾಜಕೀಯ ಪ್ರವೇಶ ಬಗ್ಗೆ ಚಿಂತನೆ ಮಾಡಿಲ್ಲ ಎಂದು ಬಿ.ಸಿ ಪಾಟೀಲ್ ತಿಳಿಸಿದರು.

ಇತ್ತೀಚೆಗೆ ತಮ್ಮ ಮಗಳೊಂದಿಗೆ ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಅನರ್ಹ ಶಾಸಕ ಬಿ.ಸಿ ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಹೀಗಾಗಿ ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

Comments

Leave a Reply

Your email address will not be published. Required fields are marked *