ಗಮನಿಸಿ, ನಾಳೆ ರಾಜ್ಯಾದ್ಯಂತ ಆಸ್ಪತ್ರೆಗಳ ಒಪಿಡಿಗಳು ಬಂದ್

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಕಿರಿಯ ವೈದ್ಯರು ಮಾಡುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ ಅದೂ ತೀವ್ರ ಸ್ವರೂಪ ಪಡೆಯಲಿದೆ. ಹೀಗಾಗಿ ನಾಳೆ ರಾಜ್ಯಾದ್ಯಂತ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಲಿವೆ.

ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು.

ಈಗ ಈ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರ ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈ ವಿಚಾರವಾಗಿ ಬುಧವಾರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಂದು ಮನವಿ ಮಾಡಿದರು ವೈದ್ಯರು ಪ್ರತಿಭಟನೆಯಲ್ಲಿ ಕೈಬಿಟ್ಟಿಲ್ಲ. ಆಗಲೇ ಮಿಂಟೋ ಆಸ್ಪತ್ರೆ ವೈದ್ಯರು ಮಾಡುತ್ತಿದ್ದ ಪ್ರತಿಭಟನೆಗೆ ನಗರದ ವಿಕ್ಟೋರಿಯಾ, ವಾಣಿ ವಿಲಾಸ್, ಮಿಂಟೋ ಆಸ್ಪತ್ರೆ ಕಿರಿಯ ವೈದ್ಯರು ಮತ್ತು ವಿಧ್ಯಾರ್ಥಿಗಳು ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜ್ಯಾದ್ಯಂತ ಒಪಿಡಿ ಬಂದ್ ಮಾಡಲು ತೀರ್ಮಾನಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಐಎಂಎ ಕಾರ್ಯದರ್ಶಿ ಡಾ.ಶ್ರೀನಿವಾಸ್, ನಾಳೆ ಬೆಳಗ್ಗೆ 6 ರಿಂದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಒಪಿಡಿಗಳು ಬಂದ್ ಆಗಲಿವೆ. ನಮ್ಮ ಬೇಡಿಕೆ ಈಡೇರಿಲ್ಲ. ಹಾಗಾಗಿ ನಾವೂ ಮೊನ್ನೆಯೆ ಹೇಳಿದಂತೆ ಶುಕ್ರವಾರದ ವರೆಗೆ ಸರ್ಕಾರಕ್ಕೆ ಸಮಯ ನೀಡುತ್ತೇವೆ. ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಲಿಲ್ಲ ಅಂದರೆ ರಾಜ್ಯಾದ್ಯಂತ ಒಪಿಡಿ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾಳೆ ರಾಜ್ಯದಲ್ಲಿರುವ 23 ಸಾವಿರ ಖಾಸಗಿ ಆಸ್ಪತ್ರೆಗಳು ಹಾಗೂ ಬೆಂಗಳೂರಿನ 5 ಸಾವಿರಕ್ಕೂ ಹೆಚ್ಚು ಆಸ್ಪತ್ರೆ ಬಂದ್ ಆಗಲಿದ್ದು, ಈ ವಿಚಾರದಲ್ಲಿ ಯದ್ವಾತದ್ವಾ ಹೇಳಿಕೆ ನೀಡಿರುವ ಭಾರತೀಯ ವೈದ್ಯಕೀಯ ಸಂಘದ ಬೆಂಗಳೂರು ಅಧ್ಯಕ್ಷ ಡಾ.ವೆಂಕಟಚಲಪತಿ, ಜನರಿಗೆ ಬುದ್ಧಿ ಕಲಿಸಲು ಒಪಿಡಿ ಸೇವೆ ಸ್ಥಗಿತ ಮಾಡುತ್ತಿದ್ದೇವೆ. ವೈದ್ಯರ ಮೇಲೆ ಹಲ್ಲೆ ಮಾಡಿದಾಗ ಜನ ಯಾಕೆ ಸುಮ್ಮನಿರುತ್ತಾರೆ? ವೈದ್ಯರ ಮೇಲೆ ಹಲ್ಲೆ ಮಾಡಿದಾಗ ಜನರು ಬೆಂಬಲಕ್ಕೆ ಬರಬೇಕು. ಜನರ ಬೆಂಬಲ ಇದ್ದರೆ ಈ ರೀತಿಯ ಹಲ್ಲೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *