ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ- ಸಿದ್ದುಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರೋ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಯನ್ನ ಕಾಂಗ್ರೆಸ್ ಹೈಕಮಾಂಡ್ ಚುರುಕುಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಸಂಬಂಧ ಮಾತುಕತೆ ನಡೆಸಲು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೈ ಹೈಕಮಾಂಡ್ ಬುಲಾವ್ ನೀಡಿದೆ. ಹೈಕಮಾಂಡ್ ಬುಲಾವ್ ಮೇರೆಗೆ ಸೋಮವಾರ ಸಂಜೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಈಗಾಗಲೇ ತಮ್ಮ ಆಪ್ತ ಪರಮೇಶ್ವರ್ ರಿಂದ ಗುಪ್ತ ರಿಪೋರ್ಟ್ ತೆಗೆದುಕೊಂಡಿರೋ ಹೈಕಮಾಂಡ್, ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾಗಿದೆ. ಬಹುತೇಕ ವಿಪಕ್ಷ ನಾಯಕನ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿಯೋ ಸಾಧ್ಯತೆ ಇದ್ದು, ಕೆಪಿಸಿಸಿ, ಶಾಸಕಾಂಗ ನಾಯಕನ ಸ್ಥಾನಕ್ಕೆ ಆಯ್ಕೆ ನಡೆಯೋ ಸಾಧ್ಯತೆ ಇದೆ. 3 ಕಾರ್ಯಾಧ್ಯಕ್ಷ ಸ್ಥಾನದ ದಾಳ ಉದುರಿಸೋ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡಿರೋದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಬಣದಲ್ಲಿ ಎಂಬಿ ಪಾಟೀಲ್, ಕೃಷ್ಣಭೈರೇಗೌಡ ಹೆಸರು ಜೋರಾಗಿ ಕೇಳಿ ಬರುತ್ತಿದೆ. ಮೂಲ ಕಾಂಗ್ರೆಸ್ಸಿಗರಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಹರಿಪ್ರಸಾದ್, ರಾಮಲಿಂಗಾರೆಡ್ಡಿ ಹೆಸರುಗಳು ಕೇಳಿ ಬರ್ತಿವೆ. ಇದರ ಜೊತೆ ನಾನು ಆಕಾಂಕ್ಷಿ ಅನ್ನೋ ಮೂಲಕ ಸತೀಶ್ ಜಾರಕಿಹೋಳಿ ಹೊಸ ಗೇಮ್ ಸ್ಟಾರ್ಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆಯಲ್ಲಿ ಸಂದಿಗ್ಧ ಪರಿಸ್ಥಿತಿಯಲ್ಲಿರೋ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎಂಬುದನ್ನು ಕಾದು ನೋಡಬೇಕು.

Comments

Leave a Reply

Your email address will not be published. Required fields are marked *