ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಗೆಲುವು: ತೇಜಸ್ವಿನಿ ಅನಂತ್‍ಕುಮಾರ್

ಬೆಂಗಳೂರು: ಈ ಬಾರಿಯೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ ಎಂದು ದಿ.ಅನಂತ್‍ಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1991ರಲ್ಲಿ ಅನಂತ್‍ಕುಮಾರ್ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟವನ್ನು ಹಾರಿಸಿದ್ದರು. 1996ರಿಂದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನಂತ್‍ಕುಮಾರ್ ತಮ್ಮ ಪರಿಶ್ರಮ ಮತ್ತು ಸ್ವಚ್ಛ ಆಡಳಿತದಿಂದಾಗಿ 6 ಬಾರಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದರು. ಸದ್ಯ ಸ್ಪರ್ಧೆ ಮಾಡಿರುವ ತೇಜಸ್ವಿ ಸೂರ್ಯ ಅವರಿಗೆ ಒಳ್ಳೆಯದಾಗಲಿ ಎಂದು ಶುಭಕೋರಿ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಅನಂತ್ ಕುಮಾರ್ ಜೀ ಮತ್ತು ನೀವು ನನ್ನ ಜೀವನದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ವ್ಯಕ್ತಿಗಳು. ನಿಮ್ಮ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಆಭಾರಿಯಾಗಿದ್ದೇನೆ. ಅನಂತ್ ಕುಮಾರ್ ಕಾರ್ಯಶೈಲಿಯಿಂದ ಪ್ರೇರಿತಗೊಂಡ ವ್ಯಕ್ತಿ ನಾನಾಗಿದ್ದು, ಒಳ್ಳೆಯ ಕೆಲಸ ಮಾಡುವ ಶಕ್ತಿಯನ್ನು ದೇವರು ನನಗೆ ಕರುಣಿಸಲಿ ಎಂದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಚುನಾವಣೆ ಘೋಷಣೆಯಾದಾಗ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್‍ಕುಮಾರ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿದ್ದವು. ಆದ್ರೆ ಕೊನೆ ಕ್ಷಣದಲ್ಲಿ ಬಿಜೆಪಿ ಯುವ ನಾಯಕನಾಗಿರುವ ತೇಜಸ್ವಿ ಸೂರ್ಯರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಕಾಂಗ್ರೆಸ್‍ನಿಂದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *