ಬರ್ತ್ ಡೇಗೂ ಮುನ್ನ ದಿನ ಬೈಕ್ ಅಪಘಾತಕ್ಕೆ ಯುವಕ ಬಲಿ

ಚಿಕ್ಕಬಳ್ಳಾಪುರ: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಬೊಮ್ಮನಹಳ್ಳಿ ಬಳಿ ತಡರಾತ್ರಿ ನಡೆದಿದೆ.

ತಾಲೂಕಿನ ವೀರಾಪುರ ಗ್ರಾಮದ ಗಗನ್ (21) ಮೃತಪಟ್ಟ ದುರ್ದೈವಿ. ಅದೇ ಗ್ರಾಮದ ಸಂದೀಪ್ ಮತ್ತು ಭಾಸ್ಕರ್ ಗಾಯಗೊಂಡವರು. ಗಾಯಾಳುಗಳನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಮೂವರು ಯುವಕರು ಒಂದೇ ಡಿಯೋ ಬೈಕ್‍ನಲ್ಲಿ ಶಿಡ್ಲಘಟ್ಟದ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಗಗನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸದ್ಯಕ್ಕೆ ಮೃತ ಗಗನ್ ಮೃತದೇಹ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಇಂದು ಮೃತಪಟ್ಟಿರುವ ಗಗನ್‍ನ ಹುಟ್ಟುಹಬ್ಬವಿತ್ತು. ಹೀಗಾಗಿ ಹುಟ್ಟುಹಬ್ಬದ ದಿನವೇ ಗಗನ್ ಅಂತ್ಯಕ್ರಿಯೆ ನೆರವೇರುವಂತಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *