ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೆಲವೊಮ್ಮೆ ಅನಿವಾರ್ಯ: ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ

ಕಲಬುರಗಿ: ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ನನ್ನ ವಿರೋಧವಿದೆ. ಅದರೆ ರಾಜಕಾರಣದಲ್ಲಿ ಕೆಲವೊಮ್ಮೆ ಅದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ, ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸುನೀಲ್ ವಲ್ಯಾಪುರೆ ಹೇಳಿದ್ದಾರೆ.

ನಾನು ಬಿಜೆಪಿಯಲ್ಲಿ 25 ವರ್ಷದಿಂದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಚಿಂಚೋಳಿ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ವಲ್ಯಾಪುರೆ ನಡೆಯೇ ನಮ್ಮ ನಡೆ ಎಂದು ಕಾರ್ಯಕರ್ತರು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಟ್ಟು ನಾನು ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆ ಕೆಜೆಪಿಗೆ ಹೋದೆ, ಆಮೇಲೆ ಬಿಜೆಪಿಗೂ ಬಂದೆ. ಕೆಲ ದಿನಗಳ ನಂತರ ನಮ್ಮದೆ ಸರ್ಕಾರ ಆಗುತ್ತೆ, ಅದಕ್ಕೆ ಉಮೇಶ್ ಜಾಧವ್‍ರನ್ನ ಪಕ್ಷಕ್ಕೆ ಕರೆತಂದಿದ್ದೇವೆ ಎಂದು ಬಿಎಸ್‍ವೈ ಹೇಳಿದ್ದರು. ಅದಕ್ಕಾಗಿ ನೀನು ಬೈ ಎಲೆಕ್ಷನ್‍ನಲ್ಲಿ ತ್ಯಾಗ ಮಾಡಬೇಕು ಎಂದು ಬಿಎಸ್‍ವೈ ಕೇಳಿಕೊಂಡಿದ್ದರು. ಪಕ್ಷದ ಹಿತದೃಷ್ಟಿಯಿಂದ ನಾನು ಬಿಜೆಪಿ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬೈ ಎಲೆಕ್ಷನ್‍ನಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಚಿಂಚೋಳಿಯಲ್ಲಿ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮೇ 19ರಂದು ಚುನಾವಣೆ ನಡೆಯಲಿದೆ.

Comments

Leave a Reply

Your email address will not be published. Required fields are marked *