ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಗುಡ್‍ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೀಪಾವಳಿಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹೆಚ್ಚಿಸಿ ಹಬ್ಬಕ್ಕೆ ಬಂಪರ್ ಗಿಫ್ಟ್ ನೀಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸರ್ಕಾರಿ ನೌಕರರಿಗೆ ಶೇ.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಜುಲೈ 1, 2019 ರಿಂದಲೇ ಇದು ಪೂರ್ವನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಇಷ್ಟು ದಿನಗಳ ಕಾಲ ಇದ್ದ ಶೇ.12ರಷ್ಟು ತುಟ್ಟಿ ಭತ್ಯೆ (ಡಿಎ)ಯನ್ನು ನೀಡಲಾಗುತಿತ್ತು. ಈಗ ಶೇ.17ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ತುಟ್ಟಿ ಭತ್ಯೆ ಹೆಚ್ಚಳ ಪಿಂಚಣಿದಾರರಿಗೂ ಅನ್ವಯವಾಗಲಿದೆ. ಒಟ್ಟು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಜನ ಪಿಂಚಣಿದಾರರು ಇದರ ಸೌಲಭ್ಯ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಇದು ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 16 ಸಾವಿರ ಕೋಟಿ ರೂ. ಹೊರೆಯಾಗಲಿದೆ ಎಂದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಸೌಲಭ್ಯ ಪಡೆಯಲು ರೈತರು ಆಧಾರ್ ಲಿಂಕ್ ಮಾಡಲು ಹೆಚ್ಚಿನ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ. ನವೆಂಬರ್ 30ರ ವರೆಗೂ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಆಶಾ ಕಾರ್ಯಕರ್ತೆಯರ ಸಂಭಾವನೆಯನ್ನು ಒಂದು ಸಾವಿರ ರೂ.ದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *