ವಿಷ ಪ್ರಸಾದ ಕೇಸ್- ಹೈಕೋರ್ಟಿನಲ್ಲೂ ಇಮ್ಮಡಿ ಸ್ವಾಮೀಜಿ ಜಾಮೀನು ಅರ್ಜಿ ವಜಾ

ಚಾಮರಾಜನಗರ: 17 ಮಂದಿ ಸಾವಿಗೀಡಾಗಿ, 112 ಮಂದಿ ಭಕ್ತರು ತೀವ್ರ ಅಸ್ವಸ್ಥಗೊಂಡಿದ್ದ ಸುಳ್ವಾಡಿ ವಿಷಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇಮ್ಮಡಿ ಮಹದೇವಸ್ವಾಮೀಜಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ನಲ್ಲಿ ಸೆಪ್ಟೆಂಬರ್ 20ರಂದು ವಿಚಾರಣೆ ನಡೆದಿತ್ತು. ಆರೋಪಿ ಪರ ವಕೀಲರು ವಾದ ಮಂಡಿಸಿ, ಇಮ್ಮಡಿ ಮಹದೇವಸ್ವಾಮೀಜಿಯನ್ನು ಅನಗತ್ಯವಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ಕೋರ್ಟಿಗೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸುಳ್ವಾಡಿ ದುರಂತ- ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ತಂದೆಯ ಕಣ್ಣೀರ ಕಥೆ ಓದಿ

ಜಾಮೀನು ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರಿ ವಕೀಲರು, ಇದೊಂದು ಹೇಯ ಹಾಗೂ ಗಂಭೀರ ಪ್ರಕರಣ. ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ವಾದಮಂಡನೆ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ಏಕಸದಸ್ಯಪೀಠವು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು.

ಏನಿದು ಪ್ರಕರಣ?:
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ 2018ರ ಡಿಸೆಂಬರ್ 14ರಂದು ವಿಶೇಷ ಪೂಜೆ ನಡೆದಿತ್ತು. ಈ ವೇಳೆ ದೇವಸ್ಥಾನದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ವಿಷ ಹಾಕಿದ್ದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, 112 ಮಂದಿ ಭಕ್ತರು ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣವೇ ತನಿಖೆ ಚುರುಕುಗೊಳಿಸಿದ ಪೊಲೀಸರು, ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮೀಜಿ, ಅಂಬಿಕಾ, ಮದೇಶ್ ಹಾಗೂ ದೊಡ್ಡಯ್ಯನನ್ನು ಬಂಧಿಸಿದ್ದರು.

ಈ ದುರಂತವು ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹೀಗಾಗಿ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಜಾಮರಾಜನಗರ ಜಿಲ್ಲಾ ವಕೀಲರ ಸಂಘವು ತೀರ್ಮಾನಿಸಿತ್ತು. ಇದರಿಂದಾಗಿ 6 ತಿಂಗಳು ಯಾರೊಬ್ಬರೂ ಆರೋಪಿಗಳ ಪರ ವಾದ ಮಾಡಲು ಮುಂದೆ ಬರಲಿಲ್ಲ. ಇಮ್ಮಡಿ ಮಹದೇವಸ್ವಾಮೀಜಿ ಪರ ಮಡಿಕೇರಿ ಮೂಲದ ವಕೀಲ ಅಪ್ಪಣ್ಣ ವಕಾಲತ್ತು ವಹಿಸಲು ಮುಂದೆ ಬಂದಿದ್ದರು. ಉಳಿದ ಆರೋಪಿಗಳಾದ ಅಂಬಿಕಾ, ಮದೇಶ್ ಹಾಗೂ ದೊಡ್ಡಯ್ಯ ಪರವಾಗಿ ವಕಾಲತ್ತು ಮಾಡಲು ಬೆಂಗಳೂರು ಮೂಲದ ಡಿ.ಪಿ.ಸದಾನಂದ ಅವರು ವಕಾಲತ್ತು ವಹಿಸಲು ಅರ್ಜಿ ಸಲ್ಲಿಸಲಿದ್ದರು.

ಇಮ್ಮಡಿ ಮಹದೇವಸ್ವಾಮೀಜಿ ಜಾಮೀನು ಕೋರಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯು ಹೈಕೋರ್ಟ್ ಮೆಟ್ಟಿಲೇರಿದ್ದ. ಸದ್ಯ ಹೈಕೋರ್ಟ್ ನಲ್ಲಿಯೂ ಇಮ್ಮಡಿ ಸ್ವಾಮೀಜಿಗೆ ಹಿನ್ನಡೆಯಾಗಿದೆ.

Comments

Leave a Reply

Your email address will not be published. Required fields are marked *