ಪ್ರಧಾನಿ ಮೋದಿ ಸೂಚನೆಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಣೆ: ಚಂದ್ರಬಾಬು ನಾಯ್ಡು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರವಾಗಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಅವರು, ಆಂಧ್ರ ಪ್ರದೇಶದಲ್ಲಿ ಗುರುವಾರ ನಡೆದ ಲೋಕಸಭಾ ಚುನಾವಣಾ ಮತದಾನದಲ್ಲಿ ಶೇ.30ರಿಂದ 40ರಷ್ಟು ಮತ ಯಂತ್ರಗಳು (ಇವಿಎಂ) ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಈ ಸಂಬಂಧ ಚುನಾವಣಾ ಆಯೋಗ ಸೂಕ್ತ ಪ್ರತಿಕ್ರಿಯೆ ನೀಡದಿದ್ದರೆ ಧರಣಿ ನಡೆಸುತ್ತೇವೆ ಎಂದು ಹೇಳಿದರು.

ಇವಿಎಂ ಕಾರ್ಯನಿರ್ವಹಣೆಯಲ್ಲಿ ಲೋಪದೋಷ ಕಂಡುಬಂದಿದೆ. ಹೀಗಾಗಿ ಸುಮಾರು 150 ಮತ ಗಟ್ಟೆಗಳಲ್ಲಿ ಮರು ಮತದಾನ ನಡೆಸಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ವಿರುದ್ಧ ಗಂಭೀರ ಆರೋಪ ಮಾಡಿದ ಚಂದ್ರಬಾಬು ನಾಯ್ಡು ಅವರು, ಚುನಾವಣಾ ಆಯೋಗವು ನಮ್ಮೊಂದಿಗೆ ಸಹಕರಿಸುತ್ತಿಲ್ಲ. ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ತಿಳಿಸಿದಂತೆ ಕಾರ್ಯನಿರ್ವಹಿಸುತ್ತಿದೆ ಎಂದರು.

ಮತದಾರರಿಗೆ ಭಾರೀ ಪ್ರಮಾಣದಲ್ಲಿ ಮೋಸ ಮಾಡಲಾಗುತ್ತಿದೆ. ಗೊಂದಲ ಸೃಷ್ಟಿಸಲಾಗಿದೆ. ಅಧಿಕಾರಗಳ ಮೂಲದ ಪ್ರಕಾರ 4,583 ಇವಿಎಂ ಸಮಸ್ಯೆಯಾಗಿದ್ದು, ಇದು ದೇಶದ ದುರಂತ ಎಂದು ದೂರಿದರು.

Comments

Leave a Reply

Your email address will not be published. Required fields are marked *