ಷರತ್ತು ವಿಧಿಸಿ ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ ಅನುಮತಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತು ವಿಧಿಸಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಪ್ರಕಟಿಸಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಮಾತ್ರ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಕಳೆದ ತಿಂಗಳು ಸುರಿದ ಮಹಾಮಳೆಯಿಂದಾಗಿ ಗುಡ್ಡ ಕುಸಿದು, ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿತ್ತು. ಹೀಗಾಗಿ ಆಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಬಂದ್ ಆಗಿದ್ದರಿಂದ ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತವಾಗಿತ್ತು.

ಬಿರುಗಾಳಿ ಸಹಿತ ಭಾರೀ ಮಳಯಾದ ಪರಿಣಾಮ ಹಾಳಾದ ರಸ್ತೆಯನ್ನು ಶಾಶ್ವತವಾಗಿ ದುರಸ್ತಿ ಮಾಡಲು ಸುಮಾರು 300 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.

ಷರತ್ತು ಏನು?
ಘಾಟಿಯಲ್ಲಿ ಪ್ರತಿ ಗಂಟೆಗೆ 20 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವುದು, ಭೂ ಕುಸಿತದಿಂದ ರಸ್ತೆಗೆ ಸಮಸ್ಯೆ ಆಗಿರುವುದರಿಂದ ಜಾಗರೂಕತೆಯಿಂದ ಚಾಲನೆ ಮಾಡುವುದು, ಫೋಟೋಗ್ರಫಿ, ಸೆಲ್ಫಿ ತೆಗೆಯುವುದಕ್ಕೆ ನಿಷೇಧ ವಿಧಿಸಲಾಗಿದೆ.

ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್‍ಸಿವಿ(ಮಿನಿ ವ್ಯಾನ್), ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬುಲೆಟ್ ಟಾಂಕರ್ಸ್, ಷಿಪ್ ಕಾರ್ಗೋ ಕಾಂಟೈನರ್, ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಸಾರ್ವಜನಿಕರು ಸಂಚರಿಸುವ ಎಲ್ಲ ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಲಾಗಿದೆ.

Comments

Leave a Reply

Your email address will not be published. Required fields are marked *