5 ತಿಂಗಳ ನಂತರ ಮಿನಿ ಬಸ್ಸುಗಳ ಸಂಚಾರಕ್ಕೆ ಮುಕ್ತವಾಯ್ತು ಚಾರ್ಮಾಡಿ ಘಾಟ್

ಚಿಕ್ಕಮಗಳೂರು: ಐದು ತಿಂಗಳ ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿದೆ.

ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಭಾರೀ ಮಳೆಯಿಂದಾಗ ಚಿಕ್ಕಮಗಳೂರಿನ ಕೊಟ್ಟಿಗೆಹಾರದಿಂದ ಮಂಗಳೂರಿನ ಬೆಳ್ತಂಗಡಿಗೆ ಸಂಪರ್ಕ ಕಲ್ಪಿಸುವ 20 ಕಿ.ಮೀ. ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಜಾಗದಲ್ಲಿ ಕುಸಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಎರಡು ತಿಂಗಳ ಬಳಿಕ ಜಿಲ್ಲಾಡಳಿತ ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಕಾರು, ಬೈಕು, ಆಂಬುಲೆನ್ಸ್ ಸೇರಿದಂತೆ ಸಣ್ಣ-ಸಣ್ಣ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಸರ್ಕಾರಿ ಬಸ್‍ಗಳಿಗೂ ಅವಕಾಶವಿರಲಿಲ್ಲ.

ರಾತ್ರಿ ವೇಳೆಯಲ್ಲಿ ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನಗಳಿಗೆ ಅವಕಾಶವಿರಲಿಲ್ಲ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ರು. ಸರ್ಕಾರಿ ಬಸ್‍ಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದರು. ಆದರೆ ಜಿಲ್ಲಾಡಳಿತ ಪ್ರವಾಸಿಗರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ದೊಡ್ಡ-ದೊಡ್ಡ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗಬೇಕಾದವರು ಸಕಲೇಶಪುರ ಮಾರ್ಗವಾಗಿ 60-70 ಕಿ.ಮೀ. ಸುತ್ತಿಬಳಸಿ ಮಂಗಳೂರು ತಲುಪಬೇಕಾಗಿತ್ತು.

ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದರು. ಇದೀಗ ಪ್ರಯಾಣಿಕರ ಸಮಸ್ಯೆಯನ್ನ ಅರಿತ ಜಿಲ್ಲಾಡಳಿತ ಮಳೆ ಸಂಪೂರ್ಣ ಕ್ಷೀಣಿಸಿರೊದ್ರಿಂದ ಚಾರ್ಮಾಡಿಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹಗಲಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದು, ಕೆ.ಎಸ್.ಆರ್.ಟಿ.ಸಿಯ ಮಿನಿ ಬಸ್ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಚಾರ್ಮಾಡಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಿರುವುದರಿಂದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಆದ ಸಂತೋಷಕ್ಕಿಂತ ಹೆಚ್ಚಿನ ಸಂತೋಷ ಕೊಟ್ಟಿಗೆಹಾರದ ಅಂಗಡಿ-ಮುಂಗಟ್ಟುಗಳ ಸಣ್ಣ-ಸಣ್ಣ ವ್ಯಾಪಾರಸ್ಥರಿಗೆ ಆಗಿದೆ.

ಕಳೆದ ತಿಂಗಳು ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್  24 ಗಂಟೆಯೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳಿಗೆ ಸಂಚರಿಸಲು ಅನುಮತಿ ನೀಡಿದ್ದರು.  ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್‍ಸಿವಿ(ಮಿನಿ ವ್ಯಾನ್), ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಬುಲೆಟ್ ಟಾಂಕರ್ಸ್, ಷಿಪ್ ಕಾರ್ಗೋ ಕಾಂಟೈನರ್, ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಸಾರ್ವಜನಿಕರು ಸಂಚರಿಸುವ ಎಲ್ಲ ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಲಾಗಿತ್ತು.

Comments

Leave a Reply

Your email address will not be published. Required fields are marked *