ರಸ್ತೆಬದಿ ಲಾರಿ ಪಲ್ಟಿಯಾಗಿ ಕ್ಲೀನರ್ ಸಾವು- ಟ್ರಾಫಿಕ್ ಪೊಲೀಸರ ವಿರುದ್ಧ ಪ್ರತಿಭಟನೆ

ಮಂಗಳೂರು: ಪೊಲೀಸರು ನಿಲ್ಲಿಸಲು ಸೂಚಿಸಿದ್ದಕ್ಕೆ ಹೆದರಿ ರಸ್ತೆ ಬದಿಯಿಂದ ಚಲಿಸಲೆತ್ನಿಸಿದಾಗ ಲಾರಿ ಪಲ್ಟಿಯಾಗಿದ್ದು, ಪರಿಣಾಮ ಕ್ಲೀನರ್ ಮೃತಪಟ್ಟಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಮೂಲದ ನಿವಾಸಿ ವಸಂತ್ ಕುಮಾರ್ (25) ಮೃತ ವ್ಯಕ್ತಿ. ಟ್ರಾಫಿಕ್ ಪೊಲೀಸರು ಓವರ್ ಬ್ರಿಡ್ಜ್ ಕಾಮಗಾರಿ ನಡುವೆ ಲಾರಿಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಿ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ತೊಕ್ಕೊಟ್ಟು ಜಂಕ್ಷನ್ ನಲ್ಲಿ ಓವರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದು, ಲಾರಿಯನ್ನು ಸೈಡಿಗೆ ಒಯ್ಯುವಾಗ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಈ ವೇಳೆ ಕ್ಲೀನರ್ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಸಂತ್ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯರು ಮಂಗಳೂರು – ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ತಡೆದು ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿ ಪ್ರಾಧಿಕಾರದ ವಿಳಂಬ ನೀತಿ ಮತ್ತು ಪೊಲೀಸರ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರು ಧಿಕ್ಕಾರ ಕೂಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *