ಶಿವಮೊಗ್ಗ: ನಾಲ್ಕು ತಿಂಗಳಿಗೆ ಉಪಚುನಾವಣೆ ಅವಶ್ಯಕತೆ ಇರಲಿಲ್ಲ. ಸುಮ್ಮನೆ ಹಣ ಪೋಲಾಗುತ್ತದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೋನ್ ಕರೆ ಮಾಡಿ, ನೀವೇ ಕಣಕ್ಕೆ ಇಳಿಯಬೇಕು ಅಂತಾ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕುಮಾರಣ್ಣನಿಗಾಗಿ ಫ್ಲೈಟ್ ಹತ್ತಿಕೊಂಡು ಶಿವಮೊಗ್ಗಕ್ಕೆ ಬಂದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದ್ದಾರೆ.
ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಗೆ ಬೇರೆ ಯಾರೇ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ ಅಂತಾ ವಿದೇಶದಲ್ಲಿದ್ದಾಗ ಕಾಂಗ್ರೆಸ್ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿದಂತೆ ಅನೇಕ ನಾಯಕರು ಒತ್ತಾಯ ಮಾಡಿದರು. ಹೀಗಾಗಿ ನಾನು ಉಪಚುನಾವಣೆ ಎದುರಿಸುತ್ತಿರುವೆ ಎಂದರು.

ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಒಂಬತ್ತೂವರೆ ವರ್ಷ ಏನು ಮಾಡಿದರು ಎನ್ನುವುದನ್ನು ಯೋಚನೆ ಮಾಡಿ. ನಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸೋಲಿಗೆ ಕಾರಣರಾಗಿದ್ದು ನ್ಯಾಯಾನಾ? ಈ ಬಾರಿ ಎಸ್.ಬಂಗಾರಪ್ಪ ಅವರ ಪುತ್ರನಾದ ನನ್ನನ್ನು ಗೆಲ್ಲಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಬೇಕು ಎಂದು ಭಾವನಾತ್ಮಕವಾಗಿ ಮತದಾರರನ್ನು ತಲುಪುವ ಪ್ರಯತ್ನ ಮಧು ಬಂಗಾರಪ್ಪ ಮಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply