ಐಟಿ ದಾಳಿ – ಮೋದಿ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಮೂಲಕ ಪ್ರಧಾನಿ ಮೋದಿಯಿಂದ ಸರ್ಜಿಕಲ್ ದಾಳಿ ನಡೆಯುತ್ತಿದೆ ಎಂದು ಐಟಿ ದಾಳಿ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ಕೆಂಡಾಮಂಡಲವಾಗಿದ್ದು, ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಐಟಿ ಅಧಿಕಾರಿಗಳ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದಾರೆ. ಐಟಿ ಅಧಿಕಾರಿ ಬಾಲಕೃಷ್ಣರಿಗೆ ಸಂವಿಧಾನಾತ್ಮಕ ಹುದ್ದೆಯ ಆಮಿಷವನ್ನು ಒಡ್ಡಿದ್ದು, ಅವರ ಸಹಾಯದಿಂದ ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಅವರು ಕೇಂದ್ರ ಸರ್ಕಾರ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ದಾಳಿ ಮೂಲಕ ವಿಪಕ್ಷಗಳಿಗೆ ಚುನಾವಣೆ ಸಮಯದಲ್ಲಿ ತೊಂದರೆ ಕೊಡುತ್ತಿದ್ದಾರೆ” ಎಂದು ಮೋದಿ ಮತ್ತು ಐಟಿ ಅಧಿಕಾರಿಗಳ ವಿರುದ್ಧವೇ ಸಿಎಂ ನೇರ ವಾಗ್ದಾಳಿ ಮಾಡಿದ್ದಾರೆ.

ಬುಧವಾರ ಸಿಎಂ ಕುಮಾರಸ್ವಾಮಿ, “ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣಾ ಸಂದರ್ಭದಲ್ಲಿ ಕರ್ನಾಟಕದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಬೆದರಿಕೆ ಹಾಕಲು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

ಇಂದು ಬೆಳಗ್ಗೆ ಮೈಸೂರು, ಮಂಡ್ಯ ಮತ್ತು ಹಾಸನ ಸೇರಿದಂತೆ ಸಚಿವ ಪುಟ್ಟರಾಜು ಮತ್ತು ರೇವಣ್ಣ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡಿದ್ದಾರೆ. ಬಿಜೆಪಿ ಅವರೇ ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ ಎಂದು ಮೈತ್ರಿ ನಾಯಕರು ಆರೋಪ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *