ಜೆಡಿಎಸ್, ಕಾಂಗ್ರೆಸ್ ಮೊದಲ ಸಮನ್ವಯ ಸಮಿತಿ ಸಭೆ: ಏನೇನು ಚರ್ಚೆಯಾಯಿತು?

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮಧ್ಯೆ ಸೇತುವೆಯಾಗಿ ಕೆಲಸ ಮಾಡಲಿರುವ ಸಮನ್ವಯ ಸಮಿತಿಯ ಮೊದಲ ಸಭೆ ಕುಮಾರಕೃಪಾದಲ್ಲಿ ಇಂದು ನಡೆಯಿತು.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಭಾಗಿಯಾಗಿದ್ದರು.

ಐದು ವರ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಒಟ್ಟಾಗಿ ಜಾರಿ ಮಾಡುವುದಕ್ಕೆ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಮಿತಿಯಲ್ಲಿ ಕಾಂಗ್ರೆಸ್‍ನಿಂದ ಮೂವರು, ಜೆಡಿಎಸ್‍ನಿಂದ ಇಬ್ಬರು ಸದಸ್ಯರು ಇರುತ್ತಾರೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ಹತ್ತು ದಿನದೊಳಗೆ ಕರಡು ಪ್ರತಿಯನ್ನು ತಯಾರು ಮಾಡಿ ಸಮಿತಿಯ ಮುಂದಿಡಬೇಕು ಎಂದು ನಿರ್ಧಾರ ಮಾಡಲಾಗಿದೆ.

ಹಿಂದಿನ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಯಥಾವತ್ ಮುಂದುವರಿಸುವ ನಿರ್ಧಾರ ಮಾಡಿದ್ದು ಡಿಗ್ರಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ.

ಒಂದು ವಾರದೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಚರ್ಚೆ ನಡೆದಿಲ್ಲ.

Comments

Leave a Reply

Your email address will not be published. Required fields are marked *