ಶಿವಮೊಗ್ಗ: ಆಂಧ್ರ ಹಾಗೂ ಒಡಿಶಾದಲ್ಲಿ ಲೋಕಸಭಾ ಸ್ಥಾನಗಳು ಖಾಲಿ ಇದ್ದರೂ ಕರ್ನಾಟಕದಲ್ಲಿ ಮಾತ್ರ ಉಪಚುನಾವಣೆ ಮಾಡುತ್ತಿರುವುದಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಆಕ್ಷೇಪ ವ್ಯಕ್ತಪಡಿಸಿ, ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ಕರ್ನಾಟಕದ ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ರಾಷ್ಟ್ರಪತಿಗಳು ಈ ಬಗ್ಗೆ ಗಮನ ಹರಿಸದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕಿಮ್ಮನೆ ಹೇಳಿದ್ದಾರೆ.

ಬೇರೆ ರಾಜ್ಯಗಳನ್ನು ಬಿಟ್ಟು ರಾಜ್ಯದಲ್ಲಿ ಮಾತ್ರ ಚುನಾವಣೆ ಏಕೆ ಎಂದು ಪ್ರಶ್ನಿಸಿದ್ದಾರೆ. ಆಯೋಗದ ಈ ನಡೆ ಅನುಮಾನಾಸ್ಪದವಾಗಿದೆ. ಕರ್ನಾಟಕದ ನಾಡಿ ಮಿಡಿತ ಅರಿಯಲು ಕೇಂದ್ರ ಸರ್ಕಾರ ಈ ಚುನಾವಣೆ ನಡೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ಕೇವಲ ನಾಲ್ಕು ತಿಂಗಳಿಗಾಗಿ ನಡೆಯುತ್ತಿರುವ ಈ ಚುನಾವಣೆಯಿಂದ ಹಣ, ಮಾನವಸಂಪನ್ಮೂಲ, ಸರ್ಕಾರಿ ಆಡಳಿತ ವ್ಯವಸ್ಥೆ ಎಲ್ಲವೂ ವ್ಯರ್ಥವಾಗುತ್ತದೆ. ಆದ್ದರಿಂದ ತಕ್ಷಣ ಈ ಅಧಿಸೂಚನೆ ಹಿಂಪಡೆದು, ಚುನಾವಣೆ ನಿಲ್ಲಿಸಿ ಎಂದು ಕಿಮ್ಮನೆ ಆಗ್ರಹಿಸಿದ್ದಾರೆ.
ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಅವರಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply