ಸದನಕ್ಕೆ ಹಾಜರಾದ ಬಳಿಕ ಆನಂದ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಮತ್ತೆ ಈಗ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆನಂಗ್ ಸಿಂಗ್ ಅವರು ಇಂದು ಕಪ್ಪು ಬಣ್ಣದ ಗ್ಲಾಸ್ ಧರಿಸಿ ಅಧಿವೇಶನಕ್ಕೆ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ ವಾಂತಿ ಹಾಗೂ ಎದೆ ನೋವು ಕಾಣಿಸಿಕೊಂಡಿದೆ. ಹಾಗಾಗಿ ಅವರು ವೈದ್ಯರ ಸಲಹೆ ಮೆರೆಗೆ ಮತ್ತೆ ಅಪೋಲೋ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. ಸದ್ಯ ಆನಂದ್ ಸಿಂಗ್ ಓಪಿಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡಯುತ್ತಿದ್ದಾರೆ.

ಆನಂದ್ ಅವರ ಪಕ್ಕೆಲುಬು ಮುರಿದಿದ್ದರಿಂದ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಇಂದು ಕಲಾಪದಲ್ಲಿ ಭಾಗವಹಿಸಿಲು ಆನಂದ್ ಸಿಂಗ್ ವಿಧಾನಸೌಧ ಮೆಟ್ಟಿಲು ಹತ್ತಿದ್ದರಿಂದ ಅವರಿಗೆ ನೋವು ಹೆಚ್ಚಾಗಿತ್ತು. ಇದರಿಂದ ಅವರು ಮನೆಗೆ ತೆರಳುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎನ್ನುವ ಕಾರಣಕ್ಕೆ ವೈದ್ಯರ ಸಲಹೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ವಾರ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದ್ದರು. ಆನಂದ್ ಸಿಂಗ್ ಸಹ ಇನ್ನೂ ಒಂದು ವಾರ ಚಿಕಿತ್ಸೆ ನಡೆಯಲಿದೆ ಎಂದು ತಿಳಿಸಿದ್ದರು. ಈ ಮಧ್ಯೆ ಆನಂದ್ ಸಿಂಗ್ ಮಂಗಳವಾರ ಆಸ್ಪತ್ರೆಯಿಂದ ದಿಢೀರನೇ ಡಿಸ್ಚಾರ್ಜ್ ಆಗಿದ್ದರು.

ಜನವರಿ 19ರ ರಾತ್ರಿ ಈಗಲ್ ಟನ್ ರೆಸಾರ್ಟಿನಲ್ಲಿ ಕಂಪ್ಲಿ ಗಣೇಶ್ ಕುಡಿದು ಗಲಾಟೆ ನಡೆಸಿ ಶಾಸಕ ಆನಂದ್ ಸಿಂಗ್ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಪೊಲೀಸ್ ವಿಶೇಷ ತಂಡಗಳ ಹುಡುಕಾಟ ನಡೆಸುತ್ತಿವೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಶಾಸಕ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಸಭೆ ನಡೆಸಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *