ಹಾವೇರಿಗೆ ಬಂದಿದ್ದ ವಿಜಯಪುರದ ಕೊರೊನಾ ಸೋಂಕಿತರು

– 21 ಜನಕ್ಕೆ ಹೋಮ್ ಕ್ವಾರಂಟೈನ್

ಹಾವೇರಿ: ವಿಜಯಪುರ ಜಿಲ್ಲೆಯ ಕೊರೊನಾ ಸೋಂಕಿತರಿಬ್ಬರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರಿಗೆ ಬಂದು ಹೋಗಿದ್ದಾರೆ ಎಂಬ ವಿಷಯ ಬಹಿರಂಗವಾಗಿದ್ದು, ಗ್ರಾಮದ 21 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ.

ವಿಜಯಪುರ ಜಿಲ್ಲೆಯ ರೋಗಿ ನಂಬರ್ 306 ಮತ್ತು 308 ಟ್ರಾವೆಲ್ ಹಿಸ್ಟರಿ ಪರಿಶೀಲಿಸಲಾಗಿದ್ದು, ಈ ವೇಳೆ ಆಡೂರಿಗೆ ಭೇಟಿ ನೀಡಿರುವುದು ಬಹಿರಂಗವಾಗಿದೆ. ಏಪ್ರಿಲ್ 5 ರಂದು ಆಡೂರಿನ ತಮ್ಮ ಸಂಬಂಧಿಕರ ಮನೆಗೆ ಬಂದು ಊಟ ಮಾಡಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸೋಂಕಿತರ ಟ್ರಾವೆಲ್ ಹಿಸ್ಟರಿ ಆಧಾರದ ಮೇಲೆ 21 ಜನರನ್ನು ಜಿಲ್ಲಾಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಗಿದೆ.

ಈ 21 ಜನರಲ್ಲಿ ಯಾರಲ್ಲೂ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಇವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅಲ್ಲದೆ ಇವರ ರಕ್ತ ಮತ್ತು ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್‍ಗೆ ಕಳುಹಿಸಿದೆ. ಪರೀಕ್ಷೆ ನಂತರ 21 ಜನರನ್ನು ಆರೋಗ್ಯ ಇಲಾಖೆ ಕ್ವಾರಂಟೈನ್ ಮಾಡಿದೆ. ಲ್ಯಾಬ್ ವರದಿ ಸೋಮವಾರ ಸಂಜೆ ಅಥವಾ ಮಂಗಳವಾರ ಆರೋಗ್ಯ ಇಲಾಖೆಯ ಕೈ ಸೇರಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ಮಾಹಿತಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *