ಮಂತ್ರಿ ಸ್ಥಾನ ಕೇಳದವನು ಖಾತೆ ಯಾಕೆ ಕೇಳಲಿ: ಸಿಟಿ ರವಿ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸಿಟಿ ರವಿ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿ ಸಚಿವ ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಅಸಮಾಧಾನ ವರದಿಗಳ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸಿಟಿ ರವಿ ಅವರು, ಸಿದ್ಧಾಂತ ಮತ್ತು ಪಕ್ಷ ನಿಷ್ಠೆಯ ಮುಂದೆ ಅಧಿಕಾರ ಮತ್ತು ಹುದ್ದೆ ಅಡ್ಡ ಬರಲು ಸಾಧ್ಯವಿಲ್ಲ. ನಾನು ಇದ್ದರೂ ಬಿಜೆಪಿ, ಸತ್ತರೂ ಬಿಜೆಪಿಯಲ್ಲೇ. ಅಧಿಕಾರ ಮತ್ತು ಹುದ್ದೆಯ ಭ್ರಮೆ ಪಕ್ಷ ನಿಷ್ಠೆಯನ್ನು ಮೀರುವ ದಿನ ಬಂದರೆ ಅದು ನನ್ನ ಜೀವನದ ಕೊನೆಯ ದಿನ ಎಂದು ಹೇಳಿದ್ದಾರೆ.

1988ರಲ್ಲಿ ಒಂದು ಬೂತ್ ಕಮಿಟಿ ಅಧ್ಯಕ್ಷನಾಗಿದ್ದ ನನಗೆ ಭಾರತೀಯ ಜನತಾ ಪಕ್ಷ ಅದೆಷ್ಟು ಹುದ್ದೆ ನೀಡಿದೆ. ನನ್ನ ಕುಟುಂಬದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಯಾರು ಇರಲಿಲ್ಲ. ನನ್ನನ್ನು ನಾಲ್ಕು ಬಾರಿ ಶಾಸಕರನ್ನಾಗಿ ಬಿಜೆಪಿ ಮಾಡಿದೆ. ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ ಎಂದು ಪ್ರಶ್ನೆ ಮಾಡಿ ತಾವು ಅಸಮಾಧಾನ ಹೊಂದಿಲ್ಲ ಎಂದಿದ್ದಾರೆ.

ನಾನು ಅಸಾಮಾಧಾನಿತನು ಅಲ್ಲ, ಬಂಡಾಯಗಾರನೂ ಅಲ್ಲ. ನನ್ನ ನಿಷ್ಠೆ ಕೇವಲ ಬಿಜೆಪಿಗೆ. ಆದರೆ ನಾನು ಸಿದ್ಧಾಂತ ನಿಷ್ಠ ಸ್ವಾಭಿಮಾನಿ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ನನ್ನೊಳಗಿನ ಹೋರಾಟಗಾರ ಎದ್ದು ನಿಲ್ಲುತ್ತಾನೆ. ನಾನೇನು ಮಾಡಲಿ, ನಾನು ಜನರ ನಡುವಿನಿಂದ ಬೆಳೆದು ಬಂದ ಹೋರಾಟಗಾರ. ಅಧಿಕಾರಕ್ಕಾಗಿ ಮಂಡಿಯೂರುವವನೂ ಅಲ್ಲಾ, ಜನರ ಪ್ರೀತಿಗಳಿಸಲು ಅಧಿಕಾರಿವೇ ಬೇಕೆಂದು ಇಲ್ಲ. ಆದರೆ ಕೆಲ ಮಾಧ್ಯಮಗಳು ನನ್ನ ಪಕ್ಷನಿಷ್ಠೆ ಬಗ್ಗೆ ಸಂಶಯ ಪಡುತ್ತಿವೆ ಅಯ್ಯೋ ಪಾಪ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *